M.S.Santosh ನಶೆಯು ತಾತ್ಕಾಲಿಕವಾಗಿದ್ದು, ಅಂತಹ ದುಶ್ಚಟಗಳಿಗೆ ಯುವಜನರು ದಾಸರಾಗಿ ಬದುಕನ್ನು ಹಾಳು ಮಾಡಿಕೊಳ್ಳಬಾರದು ಎಂದು ಹಿರಿಯ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ‘ಮೈ ಭಾರತ್’ ವತಿಯಿಂದ ಕಾಲೇಜಿನ ಎನ್ಎಸ್ಎಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ನಶಾಮುಕ್ತ ವಿಕಸಿತ್ ಭಾರತ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮಾತನಾಡಿದರು.
ನಶಾಮುಕ್ತ ಭಾರತ ನಿರ್ಮಾಣದಲ್ಲಿ ಯುವಜನರ ಪಾತ್ರ ಬಹಳ ಮುಖ್ಯವಾಗಿದ್ದು, ಯುವಜನರು ಕೆಟ್ಟ ಅಭ್ಯಾಸಗಳಿಂದ ದೂರ ಇರಬೇಕು. ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರಸ್ವಾಮಿ ಮಾತನಾಡಿ, ಯುವ ಜನತೆ ನಮ್ಮ ದೇಶದ ಶಕ್ತಿಯಾಗಿದ್ದು, ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
M.S.Santosh ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಮತ್ತು ‘ಮೈ ಭಾರತ್’ ನೋಡಲ್ ಅಧಿಕಾರಿ ಡಾ. ಡಿ.ಬಿ.ಶಿವರುದ್ರಪ್ಪ ಅವರು ಎರಡು ದಿನದ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳ ಭಾಗವಹಿಸುವಿಕೆ ಬಹಳ ಮುಖ್ಯವಾಗಿದ್ದು, ವಿವಿಧ ಸ್ಪರ್ಧೆಗಳ ಆಶಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕ್ರಿಯಾತ್ಮಕ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ ಎಂದರು.
‘ನಶಾಮುಕ್ತ ಯುವಜನತೆ’ ಎಂಬ ಆಶಯದೊಂದಿಗೆ ವಿವಿಧ ಸ್ಪರ್ಧೆಗಳು ನಡೆದವು. ಹಾಡು, ನೃತ್ಯ, ಕವನ ಬರೆಯುವುದು, ಪೋಸ್ಟರ್ ಮೇಕಿಂಗ್, ಚರ್ಚಾ ಸ್ಪರ್ಧೆ, ರೀಲ್ ಮೇಕಿಂಗ್, ಪ್ರಬಂಧ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದೇಶೀಯ ವಿದ್ಯಾಶಾಲಾ ಸಮಿತಿ ಕುಲಸಚಿವ ಡಾ. ಎಂ.ವೆಂಕಟೇಶ್ ಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಜಿಲ್ಲಾ ಯುವ ಅಧಿಕಾರಿ ಐಶ್ವರ್ಯ ಶ್ರೀನಿವಾಸ್ ಹಾಜರಿದ್ದರು.
