ಶಿವಮೊಗ್ಗ ನಗರದ ವಿವಿಧ ನಾಗರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ನಾಳೆ, ಆಗಸ್ಟ್ 10ರಂದು ತೀವ್ರ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ನೆಹರೂ ರಸ್ತೆಯಲ್ಲಿರುವ ಶಾಸಕರ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಲಿದೆ. ನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಮನವಿ ಮಾಡಿದ್ದಾರೆ.
ಪ್ರತಿಭಟನೆಯ ಪ್ರಮುಖ ಬೇಡಿಕೆಗಳಲ್ಲಿ ಶಿವಮೊಗ್ಗ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಪ್ರಮುಖವಾಗಿದೆ. ನಗರದಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಅಭಾವ ಹಾಗೂ ಕಲುಷಿತ ನೀರಿನ ಸಮಸ್ಯೆಗೆ ಅಂತ್ಯ ಹಾಡಲು ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಶುದ್ಧ ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಈ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಜಲಮಂಡಳಿಯನ್ನು ಒತ್ತಾಯಿಸಲಾಗುವುದು ಎಂದು ವೇದಿಕೆ ತಿಳಿಸಿದೆ.
ಇದರ ಜೊತೆಗೆ, ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಯು.ಜಿ. ಕೇಬಲ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದರೂ, ಅಪಾಯಕಾರಿಯಾಗಿ ಉಳಿದಿರುವ ಹಳೆಯ ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇ-ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ತಕ್ಷಣವೇ ಮುಕ್ತಗೊಳಿಸಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.
ಅದೇ ರೀತಿ, ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳಲ್ಲಿ ಕಂಡುಬಂದಿರುವ ಲೋಪ-ದೋಷಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ತಕ್ಷಣ ದುರಸ್ತಿ ಹಾಗೂ ಸರಿಪಡಿಸುವ ಕಾಮಗಾರಿ ಕೈಗೊಳ್ಳಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ಖಾತೆ ಬದಲಾವಣೆ ಶುಲ್ಕವನ್ನೂ ಸರ್ಕಾರದ ಸುತ್ತೋಲೆ ಹಾಗೂ ನಿಯಮಗಳ ಪ್ರಕಾರವೇ ಪಾಲಿಕೆಯಲ್ಲಿ ವಸೂಲಿ ಮಾಡಬೇಕು. ಸಾರ್ವಜನಿಕರಿಂದ ಈಗಾಗಲೇ ವಸೂಲಿ ಮಾಡಿರುವ ಹೆಚ್ಚುವರಿ ಶುಲ್ಕವನ್ನು ಕೂಡಲೇ ವಾಪಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಇನ್ನು ಸಾರ್ವಜನಿಕ ರಸ್ತೆಯಲ್ಲಿ SUDA ವತಿಯಿಂದ ನಿರ್ಮಿಸಿರುವ ಅನಧಿಕೃತ ಶೆಡ್ಗಳನ್ನು ತಕ್ಷಣ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.
ಈ ಎಲ್ಲ ಸಮಸ್ಯೆಗಳ ಕುರಿತು ಈಗಾಗಲೇ ಶಾಸಕರು ಹಾಗೂ ಜಿಲ್ಲಾಡಳಿತಕ್ಕೆ ಹಲವಾರು ಮನವಿಗಳನ್ನು ಸಲ್ಲಿಸಿದ್ದರೂ, ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ತಿಳಿಸಿದೆ.
“ಈ ಹೋರಾಟ ನಮ್ಮ ಹಕ್ಕಿಗಾಗಿ, ನಮ್ಮ ನಗರಕ್ಕಾಗಿ. ಪ್ರಜ್ಞಾವಂತ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು“ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಮನವಿ ಮಾಡಿದ್ದಾರೆ.
