ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಲ್ಲೂರು ಮಂಡ್ಲಿ ಬಡಾವಣೆಯ ನಿವಾಸಿಗಳು ಎದುರಿಸುತ್ತಿರುವ ವಿವಿಧ ಮೂಲಸೌಕರ್ಯ ಸಮಸ್ಯೆಗಳು ಹಾಗೂ ಮುಖ್ಯವಾಗಿ ಕುಡಿಯುವ ನೀರಿನ ತೀವ್ರ ಅಭಾವದ ಕುರಿತು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಡಾವಣೆಯ ನಿವಾಸಿಗಳೊಂದಿಗೆ ಚರ್ಚಿಸಿದ ಶಾಸಕರು, ದಿನನಿತ್ಯದ ಚಟುವಟಿಕೆಗಳಿಗೆ ಕುಡಿಯುವ ನೀರಿಲ್ಲದೆ ನಿವಾಸಿಗಳು ಅನುಭವಿಸುತ್ತಿರುವ ಕಷ್ಟಗಳನ್ನು ಆಲಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಹಾಗೂ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, “ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ನೀರಿನ ತೊಂದರೆಯಾಗದಂತೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಜೊತೆಗೆ ಬಡಾವಣೆಗೆ ಶಾಸ್ಯತ ಕುಡಿಯುವ ನೀರಿನ ಯೋಜನೆ ರೂಪಿಸಿ ಶೀಘ್ರ ಕಾಮಗಾರಿ ಆರಂಭಿಸಬೇಕು” ಎಂದು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯೇಂದ್ರ, ಯಶೋದಮ್ಮ, 8ನೇ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಕಲ್ಲೂರು ಮಂಡ್ಲಿ ಬಡಾವಣೆಯ ನೂರಾರು ನಿವಾಸಿಗಳು ಹಾಜರಿದ್ದರು.
