ಬಡ ಮಹಿಳೆಯ ಮನೆಯನ್ನ ಕೆಡವಲು ಮುಂದಾದ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬಾಳೆಬೈಲಿನಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಲಾಯಿತು.
ಪಾದಯಾತ್ರೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ, ಬಡವರ ಸಮಸ್ಯೆಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
“ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ” ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಡ ಮಹಿಳೆಯ ಮನೆಯ ತೆರವು ವಿಚಾರದಲ್ಲಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಶಾಸಕ ಆರಗ ಜ್ಞಾನೇಂದ್ರ ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಅಧಿಕಾರಿಗಳು ಬಡವರ ಪರವಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಪಾದಯಾತ್ರೆಯ ಬಳಿಕ ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಪ್ರಕರಣದಲ್ಲಿ ನ್ಯಾಯಯುತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
