ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಸರ್ಜಿ ಆಸ್ಪತ್ರೆಯ ಗೈನಕಾಲಜಿಸ್ಟ್ ಡಾ. ಸಂಧ್ಯಾ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನವಿಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಪೂರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಸರ್ಜಿ ಆಸ್ಪತ್ರೆಯ ಗೈನಕಾಲಜಿಸ್ಟ್ ಡಾ. ಸಂಧ್ಯಾ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಸ್ಟೀಲ್ ವಾಟರ್ ಬಾಟಲ್ ವಿತರಿಸಿ ಮಾತನಾಡಿದರು.
ಮಕ್ಕಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಜೀವನದಲ್ಲಿ ಉನ್ನತ ಸ್ಥಾನ ತಲುಪಿದ ನಂತರ ಶಾಲೆಯ ಬಗ್ಗೆ ಹೆಮ್ಮೆ ಹೊಂದಿರಬೇಕು. ಶಾಲೆಗೆ ಉತ್ತಮ ಹೆಸರು ತರಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಾಟಲ್ ಬಳಕೆಯನ್ನು ಕಡಿಮೆ ಮಾಡಬೇಕು. ಆರೋಗ್ಯ ಹಾಗೂ ಪರಿಸರದ ದೃಷ್ಟಿಯಿಂದ ಸ್ಟೀಲ್ ವಾಟರ್ ಬಾಟಲ್ ಬಳಸಬೇಕು. ಇದರಿಂದ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಪರಿಪೂರ್ಣ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಧ್ಯವಾದಷ್ಟು ದೂರವಿದ್ದು, ಓದು, ಕ್ರೀಡೆ ಹಾಗೂ ಉತ್ತಮ ಹವ್ಯಾಸಗಳ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ದೇಶಭಕ್ತಿ, ಶಿಕ್ಷಣ, ಆರೋಗ್ಯ, ಪರಿಸರ ಕಾಳಜಿ ಹಾಗೂ ಉತ್ತಮ ಜೀವನಶೈಲಿಯ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ನವಿಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಅನ್ನಪೂರ್ಣಾ ಅವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಮುಖ್ಯ ಶಿಕ್ಷಕ ಮಹಿಬುಲ್ಲಾ, ಪ್ರೇಮಲೀಲಾ, ಹಂಸಾ, ಶ್ರೀಲತಾ, ಮಾಲಾ, ಬಸವರಾಜ್ ಹೆರೇಮಟ್, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್, ಸದಸ್ಯರು, ಪರಿಪೂರ್ಣ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
