ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಮಲೆನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಸಿಗಂದೂರು ಸೇತುವೆಯಿಂದ ಹುಲಿದೇವರಬನದವರೆಗೆ ಬೈಕ್ ರ್ಯಾಲಿ ನಡೆಸಿದ ರೈತರು, ಬಳಿಕ ಕೋಳೂರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜನವಸತಿ ಇರುವ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದರು. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡಿನ ಗ್ರಾಮೀಣ ಭಾಗದ ಜನರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು, ಕೋಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರೈತ ನಾಯಕ ಅಶೋಕ ಜಂಬಳ್ಳಿ, ಸಾಮಾಜಿಕ ಕಾರ್ಯಕರ್ತ ಅ.ನಾ. ಚಂದ್ರಶೇಖರ್, ರೈತ ಮಂಜಪ್ಪ ಆರನಬೈಲು ಸೇರಿದಂತೆ ಹಲವು ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.
