ಸಿಗಂದೂರಿನ ಹೋಟೆಲ್ವೊಂದರಲ್ಲಿ 26 ವರ್ಷದ ಮಹಿಳಾ ಸಿಬ್ಬಂದಿಗೆ ನಿರಂತರವಾಗಿ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಶಿವರಾಜ್ ಎಂಬಾತನ ವಿರುದ್ಧ ಸಂತ್ರಸ್ತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ಆರೋಪದ ಪ್ರಕಾರ, ಆರೋಪಿ ಶಿವರಾಜ್ ಕೆಲಸದ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ, ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಒಂದು ರಾತ್ರಿ ತನ್ನೊಂದಿಗೆ ಬರುವಂತೆ ಒತ್ತಾಯಿಸಿ, ಇಲ್ಲದಿದ್ದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಆಗಸ್ಟ್ 15ರಂದು ಬೆಳಿಗ್ಗೆ ಆರೋಪಿ ಸಂತ್ರಸ್ತೆಯನ್ನು ಕೀಳಾಗಿ ನಿಂದಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವಿಚಾರವನ್ನು ತಮ್ಮನಿಗೆ ತಿಳಿಸಲು ಸಂತ್ರಸ್ತೆ ಹೊರಟಿದ್ದ ವೇಳೆ, ರಸ್ತೆಯಲ್ಲೇ ಆಕೆಯನ್ನು ತಡೆದ ಆರೋಪಿ ಎದೆಗೆ ದೂಡಿ ಕೆಳಗೆ ಬೀಳಿಸಿದ್ದಾನೆ ಎನ್ನಲಾಗಿದೆ.
ಕೆಳಗೆ ಬಿದ್ದ ಪರಿಣಾಮ ಸಂತ್ರಸ್ತೆಯ ಕೈ ಹಾಗೂ ಎದೆಗೆ ಗಾಯಗಳಾಗಿದ್ದು, ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳು ಮಧ್ಯಪ್ರವೇಶಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಶಿವರಾಜ್ ವಿರುದ್ಧ BNS ಕಲಂ 126(2), 352, 351(2) ಮತ್ತು 74ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಯಿ-ತಂದೆ ಇಲ್ಲದ ತನ್ನ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡು ಆರೋಪಿ ಹೋಟೆಲ್ನಲ್ಲಿ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕೆಲಸದ ಸ್ಥಳದಲ್ಲೇ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಲು ಯತ್ನಿಸುತ್ತಿದ್ದನೆಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಘಟನೆ ಬಳಿಕ ಆರೋಪಿ ಶಿವರಾಜ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕಾರ್ಗಲ್ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸರು ಬಲೆ ಬೀಸಿದ್ದಾರೆ.
ಕೆಲಸದ ಸ್ಥಳದಲ್ಲೇ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ಸಂತ್ರಸ್ತೆಯ ಪರರು ಆಗ್ರಹಿಸಿದ್ದಾರೆ.
