ಸಾಗರ ನಗರದ ಮಿನಿ ವಿಧಾನಸೌಧದಲ್ಲಿರುವ ತಾಲ್ಲೂಕು ಕಚೇರಿಯಲ್ಲಿ ಮಿತಿಮೀರಿರುವ ಮಧ್ಯವರ್ತಿಗಳ ಹಾವಳಿ ಹಾಗೂ ಅನಧಿಕೃತ ವ್ಯಕ್ತಿಗಳ ಹಸ್ತಕ್ಷೇಪವನ್ನು ಖಂಡಿಸಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಅವರು ಮಂಗಳವಾರ ಕಚೇರಿಯ ಪ್ರವೇಶ ದ್ವಾರದ ಮುಂಭಾಗ ದಿಢೀರ್ ಏಕಾಂಗಿ ಪ್ರತಿಭಟನೆ ನಡೆಸಿದರು. ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ಧರಣಿ ಕುಳಿತ ಅವರ ನಡೆ ಕಚೇರಿ ಆವರಣದಲ್ಲಿ ಕೆಲಕಾಲ ತೀವ್ರ ಸಂಚಲನ ಮೂಡಿಸಿತು. ಜಾತಿ ಮತ್ತು ಆದಾಯ ಪ್ರಮಾಣಪತ್ರದ ಕೆಲಸಕ್ಕಾಗಿ ಉಪ ತಹಶೀಲ್ದಾರ್ ಶ್ರೀಮತಿ ರೇಖಾ ಅವರ ಕೊಠಡಿಗೆ ತೆರಳಿದ್ದ ವೇಳೆ, ಅಲ್ಲಿಯೇ ಆಸೀನನಾಗಿದ್ದ ಮಧ್ಯವರ್ತಿಯೊಬ್ಬ ಅಧಿಕಾರಿಯಂತೆ ವರ್ತಿಸಿ ಸಾರ್ವಜನಿಕರ ಕೆಲಸಕ್ಕೆ ಅಡ್ಡಬಾಯಿ ಹಾಕಿ ದರ್ಪ ತೋರಿದ್ದೇ ಈ ದಿಢೀರ್ ಆಕ್ರೋಶಕ್ಕೆ ಪ್ರಮುಖ ಕಾರಣವಾಯಿತು. ಸರ್ಕಾರಿ ಕಚೇರಿಗಳಲ್ಲಿ ಬ್ರೋಕರ್ಗಳ ಹಾವಳಿ ತಡೆಯಲು ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಟ್ಟುನಿಟ್ಟಿನ ಸೂಚನೆಗಳಿದ್ದರೂ, ಕೆಲ ಅಧಿಕಾರಿಗಳ ಬೆಂಬಲದಿಂದಲೇ ಇಂತಹ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿವೆ ಎಂದು ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಚೇರಿ ಆವರಣದಲ್ಲಿ ರಾಜಾರೋಷವಾಗಿ ತಿರುಗಾಡುವ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ತಕ್ಷಣವೇ ಬ್ರೇಕ್ ಹಾಕಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಲಾಯಿತು. ಈ ಮನವಿಯ ಪ್ರತಿಯನ್ನು ಸ್ಥಳೀಯ ಶಾಸಕರು ಹಾಗೂ ಉಪವಿಭಾಗಾಧಿಕಾರಿಗಳಿಗೂ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ. ಸ್ಥಳದಲ್ಲೇ ದೂರು ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಆರ್., ತಾಲ್ಲೂಕು ಆಡಳಿತದ ವ್ಯಾಪ್ತಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಾರ್ವಜನಿಕರಿಗೆ ಯಾವುದೇ ಅಡೆತಡೆಯಿಲ್ಲದೆ ಪಾರದರ್ಶಕವಾಗಿ ಸೇವೆಗಳು ದೊರೆಯುವಂತೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದ ಭರವಸೆ ನೀಡಿದರು.
ಸಾಗರ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಕಾಟ: ದಿಢೀರ್ ಧರಣಿ ಕುಳಿತ ಸಾಮಾಜಿಕ ಕಾರ್ಯಕರ್ತ
Date:
