ನಾಡಿನ ಸಾಂಸ್ಕೃತಿಕ ಹೆಗ್ಗುರುತಾಗಿರುವ ಶಿವಮೊಗ್ಗ ನಗರದ ಐತಿಹಾಸಿಕ ಹಾಗೂ ವೈಭವೋಪೇತ ‘ಶಿವಮೊಗ್ಗ ದಸರಾ ಮಹೋತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ, ಶಿಸ್ತುಬದ್ಧವಾಗಿ ಮತ್ತು ಜನಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಲಾಯಿತು.
ಶ್ರೀ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆ, ಸಕ್ರೆಬೈಲು ಆನೆ ಬಿಡಾರದ ಗಜಪಡೆಗಳ ಆಕರ್ಷಕ ಹಾಗೂ ಭವ್ಯ ಜಂಬೂಸವಾರಿ ಮೆರವಣಿಗೆ, ಮಕ್ಕಳ ದಸರಾ, ಮಹಿಳಾ ದಸರಾ, ರಂಗ ದಸರಾ, ಯುವ ದಸರಾ ಸೇರಿದಂತೆ ಹತ್ತಾರು ಸಾಂಸ್ಕೃತಿಕ ಹಾಗೂ ಜ್ಞಾನ ದಸರಾ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಸಂಘಟಿಸಲು ಪಾಲಿಕೆಯ ವತಿಯಿಂದ ರಚಿಸಲಾಗುವ ಉಪಸಮಿತಿಗಳ ಕಾರ್ಯವೈಖರಿ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ನಗರದಲ್ಲಿ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಾರ್ವಜನಿಕ ಸುರಕ್ಷತೆ ಸೇರಿದಂತೆ ಉತ್ಸವಕ್ಕೆ ಆಗಮಿಸುವ ನಾಗರೀಕರಿಗೆ ಹಾಗೂ ಪ್ರವಾಸಿಗರಿಗೆ ಯಾವುದೇ ಕೊರತೆಯಾಗದಂತೆ ಸಕಲ ಸೌಲಭ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
