ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೇರಿ ಬಳಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ತಾಯಿ ಹಾಗೂ ಆರು ವರ್ಷದ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ.
ದಾವಣಗೆರೆಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರನ್ನು ಮಣಿಪಾಲದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಪ್ರೊಫೆಸರ್ ಚಲಾಯಿಸುತ್ತಿದ್ದರು. ಕಾರಿನಲ್ಲಿ ಅವರ ಆರು ವರ್ಷದ ಮಗು ಕೂಡ ಪ್ರಯಾಣಿಸುತ್ತಿತ್ತು. ಕಾರು ಚಲಾಯಿಸುವ ವೇಳೆ ಮಗು ಕರೆದ ಹಿನ್ನೆಲೆಯಲ್ಲಿ ಮಗುವನ್ನು ನೋಡಲು ಮುಂದಾದಾಗ ಕಾರಿನ ಮೇಲಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ತಕ್ಷಣ ಧಾವಿಸಿ ತಾಯಿ ಹಾಗೂ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ. ರಸ್ತೆ ಬದಿಯಲ್ಲಿ ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
