ವಿದ್ಯುತ್ ಲೈನ್ ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಶಾಕ್ಗೆ ಒಳಗಾಗಿ ಮೆಸ್ಕಾಂ ಲೈನ್ಮ್ಯಾನ್ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಗೇನಹಳ್ಳಿ ಗಡಿ ಬಳಿ ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಮೆಸ್ಕಾಂ ಆನವೇರಿ ಘಟಕದ ಲೈನ್ಮ್ಯಾನ್ ಎಸ್.ಜೆ. ಸಂಜಯ್ ದತ್ (33) ಎಂದು ಗುರುತಿಸಲಾಗಿದೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಂಬ ಹತ್ತಿದ್ದರೂ ದಿಢೀರ್ ವಿದ್ಯುತ್ ಪ್ರವಹಿಸಿದ ಪರಿಣಾಮ ಸಂಜಯ್ ದತ್ ವಿದ್ಯುತ್ ಶಾಕ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡ ಅವರನ್ನು ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಂಜಯ್ ದತ್ ಅವರು ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡಾ ಮೂಲದವರಾಗಿದ್ದು, ಪತ್ನಿ, 3 ವರ್ಷದ ಮಗಳು ಹಾಗೂ ಕೇವಲ ಒಂದು ತಿಂಗಳ ಹೆಣ್ಣು ಮಗುವನ್ನು ಅಗಲಿದ್ದಾರೆ.
ಘಟನೆ ಬಳಿಕ ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಲೈನ್ಮ್ಯಾನ್ಗಳಿಗೆ ಸಮರ್ಪಕ ಸುರಕ್ಷತಾ ಸಾಮಗ್ರಿಗಳನ್ನು ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಹಾಗೂ ಅಧಿಕಾರಿಗಳ ಒತ್ತಡ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕೊರತೆಯೇ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
