ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲ ಸಂಘಟನೆಗಳ ಕೈಗೊಂಬೆ ಆಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದರು.
ಮುಸ್ಲಿಂ ಸಮುದಾಯದ ಅಂಗಡಿಗಳಲ್ಲಿ ವ್ಯಾಪಾರ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಹಾಡುತ್ತಿರುವ ಕಿಡಿಗೇಡಿಗಳಿಗೆ ಮುಲಾಜಿಲ್ಲದೆ ಕಡಿವಾಣ ಹಾಕಬೇಕು.
ಈ ವಿಷಯದಲ್ಲಿ ಸರಕಾರ ಸುಮ್ಮನಿರಬಾರದು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.
ವಿಧಾನಸೌಧ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಷ್ಟೆಲ್ಲಾ ಆಗಿದ್ದರೂ ಸರಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಎಲ್ಲವನ್ನೂ ನೋಡಿಕೊಂಡು ಮುಖ್ಯಮಂತ್ರಿಗಳು ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳು ಒಂದು ಸಮುದಾಯಕ್ಕೆ ಮೀಸಲಿಲ್ಲ. ಆರೂವರೆ ಕೋಟಿ ಕನ್ನಡಿಗರಿಗೆ ಸೇರಿದವರು. ಎಲ್ಲರ ರಕ್ಷಣೆ ಸರಕಾರದ ಹೊಣೆ. ಒಂದು ಸಮುದಾಯವನ್ನು ರಕ್ಷಣೆ ಮಾಡಿಕೊಂಡು ಸರಕಾರ ನಡೆಸಲು ಆಗದು. ಇಂತದ್ದನ್ನು ಕನ್ನಡಿಗರು ಸಹಿಸುವುದಿಲ್ಲ. ಅವರನ್ನು ಕಿತ್ತೆಸೆಯುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.
ನಾನು ವಾಟ್ಸಪ್ ನಲ್ಲಿ ಬಂದ ಈ ಸಂದೇಶವನ್ನು ಗಮನಿಸಿದೆ. ಇಂಥ ಕಿಡಿಗೇಡಿ ಸಂದೇಶಗಳನ್ನು ಯಾರು ಹರಡುತ್ತಿದ್ದಾರೆ? ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಮಟ್ಟ ಹಾಕಬೇಕು. ಒಂದು ವೇಳೆ ಶಾಸಕರು, ಸಚಿವರೇ ಇದ್ದರೂ ಅವರನ್ನು ಬಂಧಿಸಬೇಕು ಹಾಗೂ ಅವರಿಗೆ ಜನರೇ ಬಹಿಷ್ಕಾರ ಹಾಕಬೇಕು ಆಗ್ರಹಪಡಿಸಿದರು.
ಮುಸ್ಲಿಂ ಸಮುದಾಯದ ವ್ಯಾಪಾರಗಳಿಗೆ ನಿಷೇಧ ಹೇರಬೇಕು ಎನ್ನುವ ಸಂದೇಶದಲ್ಲಿ ಸುಮಾರು 23 ವಿಚಾರಗಳ ವಿಷಯಗಳ ಬಗ್ಗೆ ಪ್ರೋತ್ಸಾಹ ಕೊಡಬೇಡಿ ಅಂತ ಬರೆಯಲಾಗಿದೆ. ಹಣ್ಣಿನ ವ್ಯಾಪಾರ, ಹೋಟೆಲ್ , ಹಾರ್ಡ್ ವೇರ್, ಟ್ರಾವೆಲ್, ಕಿರಾಣಿ ಶಾಪುಗಳಿಗೆ ಹೋಗಬೇಡಿ. ಟ್ರಾವಲ್ ಬುಕಿಂಗ್, ಕಿರಾಣಿ ಅಂಗಡಿ, ಮುಸ್ಲಿಂ ವೈದ್ಯರ ಬಳಿ ಹೋಗಬೇಡಿ ಎಂದು ಜನರಿಗೆ ತಲೆ ಕೆಡಿಸುವ ಕೆಲಸ ಆಗುತ್ತಿದೆ. ಹಿಂದುಗಳ ಅಂಗಡಿಗಳಿಗೆ ಮಾತ್ರ ಹೋಗಿ ಅಂತ ಸಂದೇಶ ಹರಡುತ್ತಿದ್ದಾರೆ. ಇವರು ನಮ್ಮ ದೇಶವನ್ನು ಎಲ್ಲಿಗೆ ಒಯ್ಯುತ್ತಿದ್ದಾರೆ? ಸರ್ವ ಜನಾಂಗದ ತೋಟವನ್ನು ಸರ್ವನಾಶ ಮಾಡುತ್ತಿದ್ದಾರೆ.
ಇಂತವರನ್ನು ಸುಮ್ಮನೆ ಬಿಡಬಾರದು. ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ ಎಂದರೆ ಅರ್ಥವೇನು? ಎಂದು ಅವರು ಪ್ರತಿಕ್ರಿಯಿಸಿದರು.
ಕರ್ನಾಟಕದಲ್ಲಿ ಈ ರೀತಿಯ ಪರಿಸ್ಥಿತಿ ಬರಲಿಕ್ಕೆ ಜೆಡಿಎಸ್ ಆಗಲಿ ಅಥವಾ ಕುಮಾರಸ್ವಾಮಿ ಕಾರಣ ಅಲ್ಲ. ಕಾಂಗ್ರೆಸ್ ನೇರ ಕಾರಣ. ಅವರಿಂದಲೇ ಇಂಥ ಸರಕಾರ ಬಂದಿತು ಎಂದು ಮಾಜಿ ಮುಖ್ಯಮಂತ್ರಿಗಳು ನೇರ ವಾಗ್ದಾಳಿ ನಡೆಸಿದರು.
ಈ ಕಾಂಗ್ರೆಸ್ ನಾಯಕರ ತೀರ್ಮಾನಗಳು ಮತ್ತು ನಮಗೆ ಕಾಂಗ್ರೆಸ್ನವರು ಜೆಡಿಎಸ್ಗೆ ಕೊಟ್ಟ ಕಿರುಕುಳ ಇಂಥ ಪರಿಸ್ಥಿತಿಗೆ ಕಾರಣ. ಈ ನಾಡಿನ ಜನರು ಈ ಪರಿಸ್ಥಿತಿ ಅನುಭವಿಸಲಿಕ್ಕೆ ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿಯವರೆ ಕಾರಣ. ಈ ಕಾರಣಕ್ಕೆ ನಾನು ಹಿಂದು ಸಮುದಾಯದ ಕೆಲ ಯುವಕರಿಗೆ ಕೈ ಮುಗಿದು ಹೇಳುತ್ತೇನೆ. ರಾಜ್ಯ ಹಾಳು ಮಾಡಿಕೊಳ್ಳಬೇಡಿ. ರಾಜಕೀಯಕ್ಕಾಗಿ ಮನಸುಗಳನ್ನು ಕೆಡಿಸುವ ಕಿಡಿಗೇಡಿಗಳ ಮಾತು ಕೇಳಬೇಡಿ. ಯಾರು ಕೂಡ ಇಲ್ಲಿ ಶಾಶ್ವತ ಅಲ್ಲ.
ಕರ್ನಾಟಕ ಶಾಂತಿಯ ತೋಟ, ಇದನ್ನು ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.
ಸಮಾಜವನ್ನು ಒಡೆಯುವ ಸಂದೇಶ ಮುಖ್ಯವಲ್ಲ. ಹೊಟ್ಟೆಗೆ ತಿನ್ನಲು ಏನು ಕೊಟ್ಟಿದ್ದಾರೆ. ಹೊಟ್ಟೆಗೆ ತಣ್ಣಿರ್ ಬಟ್ಟೆ ಅಷ್ಟೇ. ಈ ಸಮಾಜವನ್ನು ವಿಘಟನೆ ಮಾಡುತ್ತಿರುವವರು ಹಿಂದು ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತಾರಾ? ದೇವಸ್ಥಾನ ಕಟ್ಟುವರು ಓಬಿಸಿ , ದಲಿರು. ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆಯುವವರು ಇಂಥ ವಿದ್ರೋಹದ ಕೆಲಸ ಮಾಡುವವರು ಎಂದ ಅವರು, ನಾನೆಂದೂ ಇಷ್ಟು ಕಠಿಣವಾಗಿ ಮಾತಾಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.