ಕಲ್ಲೂರು-ಬಸವಾಪುರ ಮಾರ್ಗವಾಗಿ ಹಾಯ್ಹೊಳೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರ್ಕಾರ
₹ 14.20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಕರ್ನಾಟಕ ನೀರಾವರಿ ನಿಗಮ, ತುಂಗಾ ಮೇಲ್ದಂಡೆ ಯೋಜನಾ ವಲಯದಿಂದ ಭಾನುವಾರ ಹಾಯ್ಹೊಳೆ ಮುಖ್ಯರಸ್ತೆಯಲ್ಲಿ ಏರ್ಪಡಿಸಿದ್ದ ಶಿವಮೊಗ್ಗ-ತೀರ್ಥಹಳ್ಳಿ ಎನನ್ಎಚ್ 169ರಿಂದ ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್ಹೊಳೆ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಹಿಂದೆ ರಾಮಿನಕೊಪ್ಪಕ್ಕೆ ಬಂದಾಗ ಇಲ್ಲಿನ ಜನರು ರಸ್ತೆಗಾಗಿ ಮನವಿ ಸಲ್ಲಿಸಿದ್ದರು. ₹ 6 ಕೋಟಿ ಮತ್ತು ₹ 2 ಕೋಟಿ ಮಂಜೂರು ಮಾಡಿ ಶಂಕುಸ್ಥಾಪನೆ ನೆರವೇರಿಸಿ ನಂತರ ರಸ್ತೆ ಉದ್ಘಾಟನೆ ಕೂಡ ಮಾಡಲಾಗಿತ್ತು.
ರಸ್ತೆ ಹದಗೆಟ್ಟಿದ್ದನ್ನು ಮನಗಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ ಆದ್ಯತೆ ಮೇರೆಗೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಅನುದಾನ ನೀಡಲಾಗುತ್ತಿರುವುದು ಸಂತಸದ ವಿಚಾರ ಎಂದರು.
ಹಾಯ್ಹೊಳೆ ರಸ್ತೆ ಅಭಿವೃದ್ದಿಗೆ ಸರ್ಕಾರ ₹ 14.20 ಕೋಟಿ ಅನುದಾನ ಒದಗಿಸಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ವಿಧಾನಸಭಾ ಮತ್ತು ವಿಧಾನಪರಿಷತ್ ಶಾಸಕರ ನೇತೃತ್ವದಲ್ಲಿ ₹ 53.63 ಕೋಟಿ ವೆಚ್ಚದಲ್ಲಿ 150 ಸಮುದಾಯ ಭವನಗಳ ನಿರ್ಮಾಣ ಆಗಿದೆ.

ರಸ್ತೆಗಳಿಗಾಗಿ ಬೃಹತ್ ನೀರಾವರಿ ಇಲಾಖೆಯಿಂದಲೇ ಸುಮಾರು ₹ 119 ಕೋಟಿ ವೆಚ್ಚದಲ್ಲಿ 260 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಮದುವೆ ಇತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಅಗಸವಳ್ಳಿಯಲ್ಲಿ ಒಂದು ಸಮುದಾಯ ಭವನ ನಿರ್ಮಿಸಲು ₹ 50 ಲಕ್ಷ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ಅನುದಾನ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಭಾಗದ ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು ಮತ್ತು ಶರಾವತಿ ಮುಳುಗಡೆ ಸಮಸ್ಯೆ ಬಗ್ಗೆ ಅನೇಕ ತಾಂತ್ರಿಕ ಸಮಸ್ಯೆಗಳಿವೆ. ಆದರೂ, ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಿಂದೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದಾಗ ಯಡಿಯೂರಪ್ಪ ಮತ್ತು ಇತರೆ ಮುಖಂಡರು ಹೋರಾಡಿದ್ದರ ಫಲವಾಗಿ ಸರ್ಕಾರ ಒಕ್ಕಲೆಬ್ಬಿಸುವ ಮಸೂದೆ ಹಿಂಪಡೆದಿತ್ತು.
ಬಗರ್ಹುಕುಂ ಸಾಗುವಳಿದಾರರ ಪರವಾಗಿ ಪಾದಯಾತ್ರೆ ಮಾಡಲಾಗಿತ್ತು. ಬಗರ್ಹುಕುಂ, ಶರಾವತಿ ಮುಳಗಡೆ ಬಗ್ಗೆ ಶಾಸಕರ ನೇತೃತ್ವದಲ್ಲಿ ಈ ಕುರಿತು ಸರ್ಕಾರದ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸಲು ಒಟ್ಟಾಗಿ ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.
ಹನಿ ನೀರಾವರಿ ಯೋಜನೆಯಡಿ ವಿಶ್ವ ಬ್ಯಾಂಕ್ನಿಂದ ₹ 25ಕೋಟಿಯಿಂದ ₹30 ಕೋಟಿ ಸಾಲ ಪಡೆಯುವ ಅವಕಾಶ ಇದ್ದು, ಹೊಳೆಭಾಗದಲ್ಲಿ ಅಭಿವೃದ್ದಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ತಿಳಿದರು.
ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟಿ. ಪೆರುಮಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಅಗಸವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ವಿ. ಸುಬ್ರಮಣಿ, ಗ್ರಾಮ ಪಂಚಾಯಿತಿ ಇದ್ದರು.
