Friday, August 14, 2026
Friday, August 14, 2026

ದೇಶದಲ್ಲೇ ಪ್ರಥಮವಾಗಿ ಡೈರೆಕ್ಟರ್ ಆಪ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ

Date:

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ನನಸು ಮಾಡಿದೆ.

ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ. ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು.ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಮಕ್ಕಳಿಗೆ ಕೃಷಿ ಕಾಲೇಜು ಸೇರಲು ಶೇ 40ರಷ್ಟು ಮೀಸಲಾತಿ ಇತ್ತು. ಅದನ್ನು 2021ರಲ್ಲಿ ಶೇ 50ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಕಳೆದ ವರ್ಷ 186 ಜನ ರೈತರ ಮಕ್ಕಳಿಗೆ ಹೆಚ್ಚುವರಿ ಸೀಟು ಲಭಿಸಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ರೈತ ವಿದ್ಯಾನಿಧಿ ಆರಂಭ ಮಾಡಿದ್ದು, ಇದರಿಂದ 7.13 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ರೂ. 261 ಕೋಟಿ ವಿದ್ಯಾರ್ಥಿವೇತನ ಸಿಕ್ಕಿದೆ. ಇದು ಕೂಡ ದೇಶದಲ್ಲೇ ಮೊದಲು ಎಂದು ತಿಳಿಸಿದರು. ಇದರಲ್ಲಿ ಜಾತಿ ಧರ್ಮದ ಭೇದ ಇಲ್ಲ ಎಂದರು.

ಕರ್ನಾಟಕದಲ್ಲಿ ಒಟ್ಟು 742 ರೈತ ಸಂಪರ್ಕ ಕೇಂದ್ರಗಳಿದ್ದು, ಅದರಲ್ಲಿ 694 ಕೃಷಿ ಯಾಂತ್ರೀಕರಣ ಕೇಂದ್ರಗಳನ್ನು ಸ್ಥಾಪಿಸಿ 22 ಲಕ್ಷ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆಗೆ ಕೊಡಲಾಗುತ್ತಿದೆ. ಟ್ರ್ಯಾಕ್ಟರ್ ಮತ್ತಿತರ ಉಪಕರಣ ಇಲ್ಲದ ರೈತರಿಗೆ ಇದರಿಂದ ಪ್ರಯೋಜನ ಸಿಗುತ್ತಿದೆ ಎಂದು ವಿವರ ನೀಡಿದರು. ಕೃಷಿ ಯಂತ್ರೋಪಕರಣ ಬ್ಯಾಂಕ್ ಕೂಡ ಆರಂಭವಾಗಿದೆ ಎಂದರು.

ರಾಜ್ಯದಲ್ಲಿ ರಸಗೊಬ್ಬರದ ಯಾವುದೇ ಕೊರತೆ ಇಲ್ಲ. 50 ಸಾವಿರ ಮೆಟ್ರಿಕ್ ಟನ್ ಗೊಬ್ಬರವನ್ನು ಈ ವರ್ಷಕ್ಕಾಗಿ ನಾವು ದಾಸ್ತಾನು ಮಾಡಿದ್ದೇವೆ. ಯೂರಿಯಾ 30 ಸಾವಿರ ಮೆಟನ್ ಇದ್ದು, ಡಿಎಪಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ ಎಂದು ತಿಳಿಸಿದರು.

ಸೂಕ್ಷ್ಮ ನೀರಾವರಿಗೂ ಆದ್ಯತೆ ಕೊಡುತ್ತಿದ್ದು, ನೆರವು ನೀಡಲಾಗುತ್ತಿದೆ ಎಂದರು.
ರಿವಾರ್ಡ್ ರಿಜುವನೇಟಿಂಗ್ ವಾಟರ್‍ಶೆಡ್ ಫಾರ್ ಅಗ್ರಿಕಲ್ಚರ್ ಯೋಜನೆಯು ಕರ್ನಾಟಕಕ್ಕೆ ಸಿಕ್ಕಿದ್ದು, ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ವೆಚ್ಚದಡಿ ಮುಂದಿನ 5 ವರ್ಷಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ನ್ಯೂ ಜನರೇಷನ್ ವಾಟರ್‍ಶೆಡ್ ಯೋಜನೆಯಡಿ 642 ಕೋಟಿ ಮೊತ್ತವನ್ನು 51 ತಾಲ್ಲೂಕುಗಳಲ್ಲಿ ಖರ್ಚು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕಳಪೆ ರಸಗೊಬ್ಬರ, ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು. ಜಾಗೃತ ದಳವನ್ನು ಪೊಲೀಸ್ ಮಾದರಿಯಲ್ಲಿ ಜಾಗೃತಗೊಳಿಸಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು.

ರೈತರ ಟ್ರ್ಯಾಕ್ಟರ್ ಸಂಬಂಧ ಡೀಸೆಲ್‍ಗೆ ಸಬ್ಸಿಡಿ ನೀಡಲಾಗುತ್ತಿದೆ. ಇದು ಕೂಡ ದೇಶದಲ್ಲೇ ಮೊದಲ ಬಾರಿಗೆ ಜಾರಿಯಾಗಿದೆ. ಈ ಬಾರಿ ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೃಷಿ ಕಾಲೇಜು ಆರಂಭವಾಗಲಿದೆ. ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ಕೊಡಲಾಗುವುದು ಎಂದು ತಿಳಿಸಿದರು.

2020-21ರಲ್ಲಿ ರಾಜ್ಯವು ಕೋವಿಡ್ ಸಂಕಷ್ಟದಲ್ಲಿದ್ದರೂ 160.55 ಲಕ್ಷ ಮೆಟ್ರಿಕ್ ಟನ್ ಆಹಾರವನ್ನು ಉತ್ಪಾದಿಸಲಾಗಿದೆ. ಇದು ಹಿಂದಿನ ವರ್ಷದ ಉತ್ಪಾದನೆಯಲ್ಲಿ ಶೇ 10ರಷ್ಟು ಹೆಚ್ಚಳದ ಸಾಧನೆಯಾಗಿದೆ. ಕೃಷಿಕರು ಕೋವಿಡ್ ಇದ್ದರೂ ಹಿಂದೆ ಸರಿಯದೆ ಇದ್ದುದಕ್ಕೆ ಇದು ಉದಾಹರಣೆ ಎಂದು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನಾವು 2019-20ನೇ ಸಾಲಿನಲ್ಲಿ 7.32 ಲಕ್ಷ ಫಲಾನುಭವಿಗಳಿಗೆ 843 ಕೋಟಿ, 20-21ರಲ್ಲಿ 4.60 ಲಕ್ಷ ರೈತರಿಗೆ 580 ಕೋಟಿ ಬೆಳೆ ವಿಮಾ ಪರಿಹಾರ ಕೊಡಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 48 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಬೆಳೆ ಹಾನಿಗೆ ಸಂಬಂಧಿಸಿ 25.15 ಕೋಟಿ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರ ನೀಡಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2020-21 ಸಾಲಿನಲ್ಲಿ ರಾಜ್ಯದಿಂದ 49.18 ಲಕ್ಷ ರೈತರಿಗೆ 983.71 ಕೋಟಿ ಹಣವನ್ನು ನೇರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. 2021-22ರಲ್ಲಿ ಇದುವರೆಗೆ 50,035 ರೈತರಿಗೆ 1,977 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರ ಸರಕಾರ- ರಾಜ್ಯ ಸರಕಾರ ಸೇರಿ 2020-21 ಸಾಲಿನಲ್ಲಿ 52 ಲಕ್ಷಕ್ಕೂ ಹೆಚ್ಚು ರೈತರಿಗೆ 3,113 ಕೋಟಿ ಹಾಗೂ 2021-22ರಲ್ಲಿ 53 ಲಕ್ಷಕ್ಕೂ ಹೆಚ್ಚು ರೈತರಿಗೆ 2,809 ಕೋಟಿ ಹಣವನ್ನು ಇದುವರೆಗೆ ನೀಡಿದೆ ಎಂದರು.

2017ರವರೆಗೆ ಗ್ರಾಮಲೆಕ್ಕಿಗರು ಕಟ್ಟೆ ಮೇಲೆ ಕುಳಿತು ಬೆಳೆ ಸಮೀಕ್ಷೆ ನಡೆಸುತ್ತಿದ್ದರು. ಇದೀಗ ಜಿಪಿಎಸ್ ಅಳವಡಿಸಿ ಸಮೀಕ್ಷೆ ಮಾಡಲಾಗುತ್ತಿದೆ. 2020ರಲ್ಲಿ “ನನ್ನ ಬೆಳೆ ನನ್ನ ಹಕ್ಕು” ಕಾರ್ಯಕ್ರಮದ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಮಾಡುತ್ತಿದ್ದು, 46 ಲಕ್ಷ ಪ್ಲಾಟ್‍ಗಳಲ್ಲಿ ರೈತರೇ ಬೆಳೆ ಸಮೀಕ್ಷೆ ಮಾಡಿದ್ದಾರೆ. ಇದರಿಂದ ಬೆಳೆ ಉತ್ಪಾದನೆ ಸಂಬಂಧ ಏರಿಳಿತದ ಸಮಸ್ಯೆ ಪರಿಹಾರವಾಗಿದ್ದು, ರೈತರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ನಂಜುಂಡೇಗೌಡ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಜಿ.ಮಂಜುನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...