ಶಿವಮೊಗ್ಗ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆಯ ನಿರ್ಮಾಣಕ್ಕಾಗಿ ₹ 40 ಕೋಟಿ ಮಂಜೂರಾಗಿದೆ.
ಕಟ್ಟಡ ನಿರ್ಮಾಣಕ್ಕೆ ಕೂಡಲೇ ಟೆಂಡರ್ ಕರೆಯಲಾಗುವುದು ಎಂದು ಸಂಸದ ಬಿ.ವೈ.
ರಾಘವೆಂದ್ರ ಹೇಳಿದರು.
ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳದಲ್ಲಿ ಅವರು ಮಾತನಾಡಿದರು.
ಇನ್ನೂ ₹ 20 ಕೋಟಿ ಕೊರತೆ ಇದೆ. ಮಂಜೂರಾದ ಕೂಡಲೇ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆಯಬಹುದು. ಈ ಆಸ್ಪತ್ರೆ ಕಟ್ಟಡವನ್ನು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅಥವಾ ಬೇರೆಡೆ ಜಾಗ ನೋಡಿ ಮಾಡಬೇಕೋ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು 1450 ಹಾಸಿಗೆಗಳುಳ್ಳ ಸಾಮರ್ಥ್ಯಕ್ಕೆ ಉನ್ನತೀಕರಿಸಲಾಗಿದೆ. ಶಿಕಾರಿಪುರದಲ್ಲೂ 150ರಿಂದ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಉನ್ನತೀಕರಿಸಲಾಗುತ್ತಿದೆ’ ಎಂದರು.
‘ಕೋವಿಡ್ನಿಂದ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆಯಂತೆ ನಡೆದುಕೊಳ್ಳಬೇಕು. ಕೆಲಸದ ಒತ್ತಡಗಳ ನಡುವೆಯೂ ಒಂದು ಗಂಟೆಯಾದರೂ ಯೋಗಾಭ್ಯಾಸ, ವ್ಯಾಯಾಮಗಳಿಗೆ ಮೀಸಲಿಡಬೇಕು ಎಂದು ಸಲಹೆ ನೀಡಿದರು.