ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದೆಹಲಿ ಸರ್ಕಾರ, ರಾಜಧಾನಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದಲ್ಲದೆ, ಈ ನಿಯಮ ಉಲ್ಲಂಘಿಸಿದಲ್ಲಿ 500 ರೂಪಾಯಿ ದಂಡ ವಿಧಿಸಲಾಗುವುದು ಎಂದೂ ಎಚ್ಚರಿಕೆ ನೀಡಿದೆ.
ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನೇತೃತ್ವದಲ್ಲಿ ನಡೆದ ದೆಹಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯು ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಗುಂಪು ಸೇರದಂತೆ ಎಚ್ಚರಿಕೆ ವಹಿಸಬೇಕು ಎಂದು ತೀರ್ಮಾನಿಸಿತು.
ಪ್ರಕರಣಗಳು ಏರುಮುಖವಾಗಿದ್ದರೂ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪರಿಣಿತರ ಸಲಹೆ ಆಧರಿಸಿ ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಶಿಕ್ಷೆಯನ್ನು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಶಾಲೆಗಳನ್ನು ಬಂದ್ ಮಾಡಿಸುವುದಿಲ್ಲ, ಆದರೆ ಪ್ರಕರಣ ಪತ್ತೆಯಾದರೆ ತಕ್ಷಣ ವರದಿ ಮಾಡಲು ಸೂಚಿಸಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯವರು ತಿಳಿಸಿದ್ದಾರೆ .