ಮೂಲ ತಳಿಗಿಂತ ವೇಗವಾಗಿ ಹರಡಬಲ್ಲ ಓಮಿಕ್ರಾನ್ ರೂಪಾಂತರಿ ತಳಿ ಬಿಎ .2 ರ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉದ್ಭವಿಸುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಕರ್ನಾಟಕ ಆರೋಗ್ಯ ಇಲಾಖೆ ಕ್ರಮಗಳನ್ನು ಚುರುಕುಗೊಳಿಸಿದೆ.
ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹೆಚ್ಚಿನ ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ಸಾಫ್ಟ್ವೇರ್ ವೃತ್ತಿಪರರನ್ನು ಹೊಂದಿರುವ ಬೆಂಗಳೂರಿನ ಮಹದೇವಪುರ ಮತ್ತು ಪೂರ್ವ ವಲಯಗಳಿಂದ ಹೆಚ್ಚಿನ ಸಂಖ್ಯೆಯ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿಗಳು ಚಿಂತಿತರಾಗಿದ್ದಾರೆ.
ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸಿ.ಎನ್.ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ರೂಪಾಂತರಗಳಾದ ಬಿಎ.2.10 ಮತ್ತು ಬಿಎ.2.12 ಪತ್ತೆಯಾಗಿದೆ.ಬಿಎ.2 ರೂಪಾಂತರಗಳು ಈ ಹಿಂದೆ ನವದೆಹಲಿ ಮತ್ತು ಮುಂಬೈನಲ್ಲಿ ಕಂಡುಬಂದಿದ್ದವು ಎಂದು ಮಾಹಿತಿ ನೀಡಿದ್ದಾರೆ.
ಮೂರರಿಂದ ನಾಲ್ಕು ವಾರಗಳಲ್ಲಿ ಕರ್ನಾಟಕದಲ್ಲಿ ನಾಲ್ಕನೇ ಕೊರೋನಾ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. ಬಿಎ .2 ರೂಪಾಂತರವು ಉಲ್ಬಣಕ್ಕೆ ಕಾರಣವಾಗಬಹುದು ಎಂದು ಮಂಜುನಾಥ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಲ್ಕನೇ ಅಲೆಯು ಅಪ್ಪಳಿಸಿದರೆ, ಸೋಂಕಿತರು ವೇಗವಾಗಿ ಹರಡುತ್ತಿದ್ದರೂ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಮೊದಲಿಗಿಂತ ಕಡಿಮೆ ಇರುತ್ತದೆ ಎಂದು ಮಂಜುನಾಥ್ ಹೇಳಿದ್ದಾರೆ.
ರಾಜ್ಯದಲ್ಲಿ ಈಗ ಯಾವುದೇ ನಿರ್ಬಂಧಗಳು ಜಾರಿಯಲ್ಲಿಲ್ಲ ಮತ್ತು ಕೊರೋನಾ ಪೂರ್ವದ ಅವಧಿಯಂತೆ ಎಲ್ಲಾ ಚಟುವಟಿಕೆಗಳು ಪುನರಾರಂಭಗೊಂಡಿವೆ. ಇದು ಇನ್ನೂ ಎರಡು ವಾರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಲಿದೆ. ಜನರು ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
