ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರುವ ಬಗ್ಗೆ ಆತಂಕ ಎದುರಾಗಿದೆ. ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಎಲ್ಲರೂ ಸರಳ ಮಾರ್ಗಸೂಚಿ ಪಾಲಿಸಿದರೆ ಸಮಸ್ಯೆಯಾಗಲ್ಲ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಭೆ ನಡೆಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಕೆಲವರು ವಿಶ್ವದಲ್ಲಿ ಕೊರೊನಾ ಸೋಂಕು ಇಲ್ಲ ಎಂದುಕೊಂಡಿದ್ದಾರೆ. ನಮ್ಮ ರಾಜ್ಯಕ್ಕೂ ಕೊರೊನಾ 4 ನೇ ಅಲೆ ಬಗ್ಗೆ ವರದಿಯಾಗಿದೆ.
ಅಂತರರಾಜ್ಯ ಪ್ರಯಾಣಿಕರ ಮೇಲೆ ನಿಗವಹಿಸಲಾಗುವುದು. ಹಬ್ಬ ಮಾಡಬೇಡಿ ಎಂದು ಯಾರೂ ಹೇಳುವುದಿಲ್ಲ. ಯಾವುದೇ ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧಿ ವಿಧಿಸಿಲ್ಲ. ಕೊರೊನಾ ಇರುವುದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.