ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ,ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ.
ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ನೂತನ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ವಾಹನಗಳ ಬಿಡುಗಡೆ ಮುಂದೂಡುವಂತೆ ಮನವಿ ಮಾಡಲಾಗಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದ್ದಾರೆ.
ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಇದರಲ್ಲಿ ವಾಹನ ತಯಾರಕರ ಅಥವಾ ಗ್ರಾಹಕರ ಪ್ರಮಾದ ಇದೆಯೇ ಎಂಬ ಕುರಿತು ಸರ್ಕಾರ ಸ್ಪಷ್ಟನೆ ಬಯಸಿದೆ. ತನಿಖಾ ವರದಿಯನ್ನು ಆಧರಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಕುರಿತು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಸಚಿವಾಲಯದ ಮನವಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದಕ ಕಂಪನಿಗಳು ಧನಾತ್ಮಕವಾಗಿ ಸ್ಪಂದಿಸಿದೆ. ಸಂಪೂರ್ಣ ಸಹಕಾರದ ಭರವಸೆ ನೀಡಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಚಾರ್ಜಿಂಗ್ ಸುರಕ್ಷತೆ ಹಾಗೂ ಅಗ್ನಿ ಅವಘಡಗಳನ್ನು ತಪ್ಪಿಸುವುದು ಹೇಗೆ? ಎಂಬ ಬಗ್ಗೆ ಗ್ರಾಹಕರಿಗೆ ತಿಳುವಳಿಕೆ ನೀಡುವಂತೆ ಸಚಿವಾಲಯ ಕೋರಿದೆ.
ಅಗ್ನಿ ಅವಘಡಗಳ ನಂತರ ಕೇಂದ್ರ ಸರ್ಕಾರ ರಚಿಸಿರುವ ತಜ್ಞರ ಸಮಿತಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.