ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂಮಾಲೀಕರಿಗೆ 3 ದಿನದಲ್ಲಿ ಅವಕಾಶ ಕಲ್ಪಿಸಲು ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ಮತ್ತು ರಾಜ್ಯದ 9 ವಿವಿಧ ಮಾಸಿಕ ಪಿಂಚಣಿಗಳ ಅರ್ಹರಿಗೆ 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಹಲೋ, ಕಂದಾಯ ಸಚಿವರೇ ಸಹಾಯವಾಣಿ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ.
ನಿನ್ನೆ ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು, ಇಲಾಖೆಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಕುರಿತು ವಿಸ್ತೃತವಾಗಿ ಮಾಹಿತಿ ನೀಡಿದರು.
ದೇಶದಲ್ಲಿಯೇ ಪ್ರಥಮ ಬಾರಿಗೆ ದೂರವಾಣಿ ಮೂಲಕವೇ ಪಿಂಚಣಿ ಕೋರಿಕೆ ಸ್ವೀಕರಿಸಿ 72 ಗಂಟೆಯಲ್ಲಿ ನವೋದಯ ಮೊಬೈಲ್ ಆ್ಯಪ್ ಆಧರಿಸಿ ಪಿಂಚಣಿ ಮಂಜೂರಾತಿ ಮಾಡುವ ವಿನೂತನ ಕಾಗದ ರಹಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಲಿದೆ. ಆ ಸಮಯದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂ.ಗಿಂತ ಕಡಿಮೆ ಇರುವ ವೃದ್ಧರು, ಅಂಗವಿಕಲರು, ವಿಧವೆಯರು ಮತ್ತು ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ದೂರವಾಣಿ ಮೂಲಕ ಕೋರಿಕೆ ಸಲ್ಲಿಸಬಹುದು. ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯಕ್ಕೆ ಮನವಿ ಮಾಡಬಹುದಾಗಿದೆ. ದೂರವಾಣಿ ಮೂಲಕ ಸ್ವೀಕರಿಸಲಾದ ಕೋರಿಕೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆಬಾಗಿಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನವೋದಯ ಮೊಬೈಲ್ ಆ್ಯಪ್ ಮೂಲಕ ಅರ್ಜಿದಾರರ ಮಾಹಿತಿ ನಮೂದಿಸುತ್ತಾರೆ. ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಖಾತೆ ವಿವರ, ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳನ್ನು ಒದಗಿಸಬೇಕು. ಅರ್ಹರಿಗೆ 72 ಗಂಟೆಯೊಳಗೆ ಉಪತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ ನೀಡಲಾಗುತ್ತದೆ ಎಂದು ವಿವರಿಸಿದರು.