ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.
ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಲ ಬೇಗೆ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆ ವಿಸ್ತರಿಸಬೇಕು. ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದುಕೊಂಡೇ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಬಿಸಿ ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.
ಕೊರೋನಾ ಕಾರಣದಿಂದಾಗಿ ಮಕ್ಕಳ ಕಲಿಕಾ ಮಟ್ಟದಲ್ಲಿ ಹಿನ್ನಡೆಯಾಗಿದೆ. ಆದ್ದರಿಂದ ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭಿಸಲಾಗುತ್ತದೆ. ಮೇ 16 ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಶ್, ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಅಂಕಗಳ ಕ್ರೋಡೀಕರಣ ಮಾಡಲಾಗುತ್ತಿದೆ. ಮೇ 3ನೇ ವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.