ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಅಭಿಪ್ರಾಯ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ.
ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ಮನೆಗೆ ವಿಜಯೇಂದ್ರ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ.
ವಿಜಯೇಂದ್ರ ಸಂಪುಟಕ್ಕೆ ಬಂದರೆ ಹಳೇ ಮೈಸೂರು ಸೇರಿದಂತೆ ಲಿಂಗಾಯಿತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗೆ ಅವರನ್ನು ಬಳಕೆ ಮಾಡಿಕೊಳ್ಳಬೇಕು. ಈ ಹಿಂದೆ ರಾಜ್ಯದ ವಿವಿಧೆಡೆ ನಡೆದ ಉಪಚುನಾವಣೆಯಲ್ಲಿ ಕೆಲವು ಕಡೆ ಅವರ ವರ್ಚಿಸ್ಸಿನಿಂದಲೇ ಗೆಲ್ಲಬೇಕು ಎಂಬ ಮಾತು ಕೇಳಿಬಂದಿದೆ.
ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂಬ ಒಂದು ಸಾಲಿನ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆಯಾದರೆ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಆರು ತಿಂಗಳೊಳಗೆ ಅವರು ಯಾವುದಾದರೊಂದು ಸದನದ ಸದಸ್ಯರಾಗಬೇಕು.
ಹೀಗಾಗಿ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಂಘಟನೆಯೇ ಇಲ್ಲದ ಕೆ.ಆರ್.ಪೇಟೆ, ಶಿರಾ ಸೇರಿದಂತೆ ಮತ್ತಿತರ ಕಡೆ ಬಿಜೆಪಿ ಗೆಲ್ಲಲು ವಿಜಯೇಂದ್ರ ಅವರ ವರ್ಚಸ್ಸೇ ಕಾರಣ. ಯಡಿಯೂರಪ್ಪ ಅವರನ್ನು ಅಕಾರದಿಂದ ಕೆಳಗಿಳಿಸಿರುವ ಕಾರಣ ಪಕ್ಷದ ಬೆನ್ನೆಲುಬಾಗಿ ನಿಂತಿರುವ ವೀರಶೈವ ಲಿಂಗಾಯಿತ ಸಮುದಾಯ ಕೈಬಿಟ್ಟು ಹೋಗದಂತೆ ವಿಜಯೇಂದ್ರ ಅವರಿಗೆ ಮಣೆ ಹಾಕಲು ಬಿಜೆಪಿ ವರಿಷ್ಠರು ಲೆಕ್ಕ ಹಾಕಿದ್ದಾರೆ.
ರಾಜ್ಯವನ್ನು ಪ್ರತಿನಿಧಿಸುವ ದೆಹಲಿಯ ಪ್ರಭಾವಿ ನಾಯಕರೊಬ್ಬರ ಕೈಚಳಕ ಇಲ್ಲವೇ ಹಸ್ತಕ್ಷೇಪವಿಲ್ಲದಿದ್ದರೆ ವಿಜಯೇಂದ್ರ ಹಾದಿ ಸುಗಮ ಎನ್ನಲಾಗುತ್ತಿದೆ.