ಶಿವಮೊಗ್ಗದ ನಗರದ ಹೊರವಲಯದ ಸೊಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ.
ಈ ವರ್ಷದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಗುರುವಾರ ವಿಮಾನ ನಿಲ್ದಾಣ ಕಾಮಗಾರಿ ಹಾಗೂ ಇನ್ನಿತರ ವಿಷಯವನ್ನು ತಿಳಿಯಲು ಕೇಂದ್ರದ ಅಧಿಕಾರಿಗಳ ತಂಡವು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆಯಿತು. ಈ ಕುರಿತು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮಾಹಿತಿ ನೀಡಿದರು.
ವಿಮಾನ ನಿಲ್ದಾಣ ನಿರ್ಮಾಣ ಸ್ಥಳಕ್ಕೆ ಕೇಂದ್ರ ವಿಮಾನಯಾನ ಖಾತೆ ತಂಡವನ್ನು ಕಳುಹಿಸಿಕೊಡಲು ಮನವಿ ಮಾಡಿದ್ದರು.
ವಿಮಾನ ನಿಲ್ದಾಣ ಪ್ರಾಧಿಕಾರದ ಡಿಜಿಎಂ ರವೀಂದ್ರನಾಥ್ ನೇತೃತ್ವದ ತಂಡದಲ್ಲಿ ಅಧಿಕಾರಿಗಳಾದ ಬಾಲಾಜಿ, ಫೇರೋಜ್, ದೊರೈ ರಾಜು, ಅಂಟೋನಿ, ವೆಂಕಟಾಚಲಂ ಇದ್ದರು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸು. ಅವರು ಮುಖ್ಯಮಂತ್ರಿಯಾಗಿದ್ದಾಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದ್ದ ಅಡೆ-ತಡೆ ನಿವಾರಿಸಿ, ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ್ದರು.
ಮೊದಲು 2500 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರ್ಗೆ ಹೆಚ್ಚಿಸಲಾಯಿತು.
ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆ ವ್ಯಾಪ್ತಿಗೆ ಸೇರಿಸಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶಿವಮೊಗ್ಗ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಕೈಗಾರಿಕಾ ಅಭಿವೃದ್ಧಿ ಆಗುವ ನಿರೀಕ್ಷೆ ಇದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಮುಖ್ಯ ಇಂಜಿನಿಯರ್ ಕಾಂತರಾಜ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಸಂಪತ್, ಎಇಇ ಕಿರಣ್ ಮುಂತಾದವರು ಕೇಂದ್ರದ ಅಧಿಕಾರಿಗಳ ತಂಡಕ್ಕೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು.