ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಕಳಪೆ ಗುಣಮಟ್ಟದ ಆಹಾರವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಪರಿಷ್ಕೃತ ಪೌಷ್ಟಿಕಾಂಶ ಹಾಗೂ ಆಹಾರದ ಮಾನದಂಡಗಳ ನಿರ್ದಿಷ್ಟತೆ ಮತ್ತು ಮಾನದಂಡಗಳಿಗೆ ಅನುಗುಣವಾಗಿಲ್ಲದ ಆಹಾರ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಬಾರದು ಎಂದೂ ಸಹ ನ್ಯಾಯಾಲಯ ತಾಕೀತು ಮಾಡಿದೆ.
ಸಂಗೀತಾ ಗದಗಿನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಐಸಿಡಿಎಸ್ ಚಟುವಟಿಕೆಯಲ್ಲಿ ತೊಡಗಿರುವ ಮಹಿಳಾ ಸಂಘಟನೆಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಇತ್ಯರ್ಥಪಡಿಸಿದ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಮತ್ತು ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ವಿಭಾಗೀಯಪೀಠ ಈ ಅದೇಶವನ್ನು ನೀಡಿದೆ.