ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಭಿನ್ನಾಭಿಪ್ರಾಯಗಳನ್ನು ಟೂಲ್ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ತುಂಬಾ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಿಂದೆ ಅವರು 10 ನೇ ತರಗತಿಯಲ್ಲಿ ಸೇರಿಸಿರುವ ತಮ್ಮ ಪಠ್ಯವನ್ನು ಹಿಂತೆಗೆದುಕೊಳ್ಳಬೇಕು ಎಂದು ಹೇಳಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಆದರೆ ಸರ್ಕಾರ ಇದಕ್ಕೆ ಸ್ಪಂದಿಸದೇ ತನ್ನ ನಡೆಯನ್ನು ಸಮರ್ಥಿಸಿಕೊಂಡಿರುವ ಬೆನ್ನಲ್ಲೇ ದೇವನೂರು ಮಹದೇವ ಅವರು ಈಗ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರಿಗೆ ಮತ್ತೊಮ್ಮೆ ಪತ್ರ ಬರೆದು ಇದನ್ನು ದಯವಿಟ್ಟು ಮುಂದುವರೆಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.