ರಾಜ್ಯ ಸರ್ಕಾರವು ಜನರಿಗೆ ಮತ್ತೊಂದು ಸಂತೋಷದ ಸಮಾಚಾರ ತಿಳಿಸಿದೆ. ರಾಜ್ಯದ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೂಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಬೊಮ್ಮಾಯಿ ಅವರು, ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಆಸ್ಪತ್ರೆಯನ್ನು ಆರಂಭಿಸಲಾಗುತ್ತದೆ. ಪ್ರಯೋಗ ಯಶಸ್ವಿಯಾದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರಿ ಕ್ಲಿನಿಕ್ ಉಪಯೋಗವನ್ನು ಮನಗಂಡು ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಮಂಗಳೂರುಮಹಾನಗರ ಪಾಲಿಕೆಗಳಿಗೆ ಇವುಗಳನ್ನು ಆರೋಗ್ಯ ಇಲಾಖೆಯಿಂದ ಹಸ್ತಾಂತರ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರಿಗೆ ಪ್ರಯೋಗಾಲಯದ ಸೇವೆ ಒದಗಿಸುವ ಉದ್ದೇಶದಿಂದ ಸಂಚಾರಿ ಆಸ್ಪತ್ರೆಯನ್ನು ಇನ್ಫೋಸೆಸ್ ಹಾಗೂ ರೋಟರಿ ಸಂಸ್ಥೆಗಳು ದೇಣಿಗೆಯಾಗಿ ನೀಡಿವೆ ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆಯ ಕೊರತೆ ಇರುವ ಕಡೆಗಳಲ್ಲಿ ಇಂತಹ ಸಂಚಾರಿ ಕ್ಲಿನಿಕ್ ಗಳನ್ನು ಒದಗಿಸಲಾಗುತ್ತಿದೆ. ಆರೋಗ್ಯ ಸೇವೆಗಳು ತಲುಪದೆ ಇರುವವರಿಗೆ ಈ ಸೇವೆಗಳನ್ನು ತಲುಪಲಿವೆ.ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಸಂಚಾರಿ ಕ್ಲಿನಿಕ್ ನಲ್ಲಿ ಸಾಂಕ್ರಮಿಕ ರೋಗಗಳಾದ ಕೊರೋನಾ ವೈರಸ್, ಟಿಬಿ, ಮಲೇರಿಯಾ, ಡೆಂಘಿ ಮತ್ತು ಸಾಂಕ್ರಮಿಕ ರೋಗಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗಿದೆ. ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ನಿರಂತರವಾಗಿ ಗ್ರಾಮೀಣ ಭಾಗದ ಜನರಿಗೆ ಸೂಕ್ತ ಸಮಯದಲ್ಲಿ ನೀಡಲಿವೆ ಎಂದು ತಿಳಿಸಿದ್ದಾರೆ.