ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮಹೇಶ ಹಿರೊಳ್ಳಿ ಹಾಗೂ ಸೈಫನ್ ಕರ್ಜಗಿ ಬಂಧಿತ ಆರೋಪಿಗಳಾಗಿದ್ದಾರೆ. ಪಿಎಸ್ಐ ಪರೀಕ್ಷೆ ಬರೆದಿದ್ದ ಇಸ್ಮಾಯಿಲ್ ಖಾದರ್ ಎಂಬಾತ ಪರಾರಿಯಾಗಿದ್ದು, ಆತನ ಬಂಧನಕ್ಕೂ ಬಲೆ ಬೀಸಲಾಗಿದೆ ಎನ್ನಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 41ಕ್ಕೆ ಏರಿಕೆ ಆಗಿದೆ.
ಇಸ್ಮಾಯಿಲ್ ಖಾದರ್ ಈಗಾಗಲೇ ಪೊಲೀಸ್ ಇಲಾಖೆಯಲ್ಲಿದ್ದು, ಪಿಎಸ್ಐ ಪರೀಕ್ಷೆ ಬರೆದಿದ್ದ. ಆರ್.ಡಿ ಪಾಟೀಲ್ ಸಹಾಯದಿಂದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಎನ್ನಲಾಗುತ್ತಿದೆ. ಇವರೆಲ್ಲರೂ ಅಫಜಲಪುರ ತಾಲೂಕಿನ ಕರ್ಜಗಿ ಮೂಲದವರಾಗಿದ್ದಾರೆ.
ಬ್ಲೂಟೂತ್ ಕಿಂಗ್ಪಿನ್ ಆರ್. ಡಿ ಪಾಟೀಲ್ಗೆ ಆಪ್ತರಾಗಿದ್ದ ಆರೋಪಿಗಳು, ಆತನ ಜತೆಗೂಡಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ವಿಷಯ ಸಿಐಡಿ ತನಿಖೆಯಲ್ಲಿ ಬಯಲಾಗಿದೆ.