ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ವತಿಯಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಉದ್ದೇಶದಿಂದ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ದಿಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಪ್ರತಿಪಕ್ಷಗಳ ಸಭೆ ಆಯೋಜಿಸಿದ್ದಾರೆ.
ಇನ್ನು ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸೇರಿದಂತೆ 22 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಮಮತಾ ವಿರೋಧಿ ಪಕ್ಷವಾದರೂ ಕಾಂಗ್ರೆಸ್ ವತಿಯಿಂದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲಾ ಹಾಗೂ ಜೈರಾಂ ರಮೇಶ್ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಹೀಗಿರುವಾಗ ಈ ಮಹತ್ವದ ಸಭೆಯಲ್ಲಿ ಸಭೆಯಲ್ಲಿ ತೃತೀಯ ರಂಗದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾದ್ಯತೆ ಇದೆ ಎನ್ನಲಾಗಿದೆ. ಶರತ್ ಪವಾರ್ ಅಥವಾ ದೇವೇಗೌಡ ಇಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿ ಮಾಡಲು ತೃತೀಯ ರಂಗದ ಆಸಕ್ತಿ ತೋರಿದ್ದಾರೆನ್ನಲಾಗಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಚ್ಡಿ ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ಡಿ ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದಿದ್ದಾರೆ.
ಇನ್ನು ಏಕಪಕ್ಷೀಯವಾಗಿ ಸಭೆ ಕರೆದಿದ್ದಕ್ಕೆ ಅಪಸ್ವರ ಎತ್ತಿರುವ ಎಡಪಕ್ಷಗಳ ನಾಯಕರು, ತಮ್ಮ ಬದಲಿಗೆ ತಮ್ಮ ಪಕ್ಷದ ಸಂಸದರನ್ನು ಸಭೆಗೆ ಕಳುಹಿಸಲು ನಿರ್ಧರಿಸಿದ್ದಾರೆ.