ಭದ್ರಾವತಿಯ ಐತಿಹಾಸಿಕ ಪ್ರಸಿದ್ದ ಶ್ರೀ ಲಕ್ಷಿನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಸುಮಾರು 50 ಲಕ್ಷ ರೂ. ಅನುದಾನದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಶಿಥಿಲಗೊಳ್ಳುತ್ತಿರುವ ದೇವಾಲಯವನ್ನು ಜೀರ್ಣೋದ್ದಾರ ಮಾಡಲು ಹಾಗೂ ದೇವಾಲಯ ಅಭಿವೃದ್ಧಿಗಾಗಿ ಕೇಂದ್ರ ಪುರಾತತ್ವ ಇಲಾಖೆಯಿಂದ ಸುಮಾರು 4 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದರು.
ಕೇಂದ್ರದ ಅನುದಾನ ದೊರೆಯುವುದು ತಡವಾದರೆ, ಸದ್ಯ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡಿರುವ 50 ಲಕ್ಷ ರೂ. ಅನುದಾನದಲ್ಲಿ ದೇವಾಲಯದ ಆವರಣದಲ್ಲಿ ಯಾತ್ರಿ ನಿವಾಸ, ಶೌಚಾಲಯ ಸೇರಿದಂತೆ ಭಕ್ತರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳ ನಿರ್ಮಾಣ ಹಾಗೂ ದೇವಾಲಯದಲ್ಲಿ ಸೋರುವುದನ್ನು ತಡೆಯಲು ತುರ್ತು ಕ್ರಮವನ್ನು ಶೀಘ್ರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿ ಶೇಜೇಶ್ವರ್, ಎಸಿ ದೊಡ್ಡಣ್ಣ ಗೌಡ, ಪ್ರಮುಖರಾದ ಎಸ್. ದತ್ತಾತ್ರಿ,ಕೆಂಚೇನಳ್ಳಿ ಕುಮಾರ್, ಆನಂದ್, ಮಂಗೋಟೆ ರುದ್ರೇಶ್, ತಹಶೀಲ್ದಾರ್ ಪ್ರದೀಪ್ ನಿಕ್ಕಂ, ಎಇಇ ದಯಾನಂದ್, ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾರುತಿ, ಪ್ರಧಾನ ಅರ್ಚಕ ರಂಗನಾಥ್ ಶರ್ಮಾ, ಸಹಾಯಕ ಅರ್ಚಕ ಶ್ರೀನಿವಾಸ್, ಪ್ರಮುಖರಾದ ನರಸಿಂಹಾಚಾರ್, ರಾಮಲಿಂಗಯ್ಯ, ನಗರಸಭಾ ಸದಸ್ಯೆ ಅನುಪಮಾ ಚೆನ್ನೇಶ್ ಹಾಗೂ ಹಲವರು ಉಪಸ್ಥಿತರಿದ್ದರು.
