ಮಹಿಳೆಯರಿಗೆ ಗುಣಮಟ್ಟದ ಪ್ರತ್ಯೇಕ ವೈದ್ಯಕೀಯ ಸೇವೆ ಒದಗಿಸಲು ರಾಜ್ಯಾದ್ಯಂತ 250 ‘ಆಯುಷ್ಮತಿ ಕ್ಲಿನಿಕ್’ಗಳನ್ನು ಪ್ರಾರಂಭ ಮಾಡಲಾಗುವುದು. ಈ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಇದನ್ನು ಮತ್ತಷ್ಟು ತಗ್ಗಿಸಲು ‘ಆಯುಷ್ಮತಿ ಕ್ಲಿನಿಕ್’ಗಳು ನೆರವಾಗಲಿವೆ. ಇಲ್ಲಿ ಗರ್ಭಿಣಿಯರಿಗೆ ನಿಯಮಿತ ಆರೋಗ್ಯ ತಪಾಸಣೆ, ಪೌಷ್ಠಿಕ ಆಹಾರ ಸೇವನೆ ಹಾಗೂ ವೈಯಕ್ತಿಕ ಸ್ವಚ್ಛತೆಯ ಕುರಿತು ಸಲಹೆ, ಅಗತ್ಯ ಔಷಧಗಳ ಉಚಿತ ಪೂರೈಕೆಯಿಂದ ಗರ್ಭಿಣಿಯರಲ್ಲಿ ಸಾಮಾನ್ಯವಾಗಿ ಕಂಡುಬರುವ ರಕ್ತ ಹೀನತೆ, ಮಧುಮೇಹ, ರಕ್ತದೊತ್ತಡದಂತಹ ಸಾಮಾನ್ಯ ಸಮಸ್ಯೆಗಳನ್ನು ತಡೆಯಬಹುದಾಗಿದೆ. ಇದರಿಂದ ಹೆರಿಗೆ ಸಂದರ್ಭದಲ್ಲಿ ಸಂಭವಿಸು ತಾಯಿ ಮತ್ತು ಶಿಶುಗಳ ಮರಣ ಪ್ರಮಾಣವನ್ನು ತಡೆಯಬಹುದಾಗಿದೆ ಎಂದರು.
ಚಿಕ್ಕ ಮತ್ತು ಹದಿಹರೆಯದ ಹೆಣ್ಣು ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರಿಗೆ ಆರೋಗ್ಯ ಸೇವೆ ದೊರೆಯಲಿದೆ. ಮನೆ, ಮಕ್ಕಳು ಸೇರಿ ಕುಟುಂಬದ ಸದಸ್ಯರ ಆರೋಗ್ಯ ನಿರ್ವಹಣೆ ಮಾಡುವ ಮಹಿಳೆಯರು ಕೆಲಸದ ನಡುವೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಾರೆ.
ಅದು ಗೃಹಿಣಿಯಾಗಿರಬಹುದು, ಕೆಲಸಕ್ಕೆ ಹೋಗುವವರಾಗಿರಬಹುದು. ಮಹಿಳೆಯರು ಆರೋಗ್ಯದ ಬಗ್ಗೆ ಸದಾ ನಿರ್ಲಕ್ಷ್ಯ ಹೊಂದಿರುತ್ತಾರೆ. ಪರಿಣಾಮ ಆರೋಗ್ಯ ಸಮಸ್ಯೆ ಗಂಭೀರ ಹಂತಕ್ಕೆ ತಲುಪಿದಾಗ ಚಿಕಿತ್ಸೆಗೆ ಹೋಗುತ್ತಾರೆ. ಇದಕ್ಕೆ ಪರಿಹಾರವಾಗಿ ಹಾಗೂ ಆರಂಭದಲ್ಲೇ ಆರೋಗ್ಯ ಸಮಸ್ಯೆ ಗುರುತಿಸಿ ಸೂಕ್ತ ಚಿಕಿತ್ಸೆ ಒದಗಿಸಲು ‘ಆಯುಷ್ಮತಿ ಕ್ಲಿನಿಕ್’ಗಳನ್ನು ತೆರೆಯಲಾಗುತ್ತಿದೆ ಮಾಹಿತಿ ನೀಡಿದರು.
ಇದು ಕೇವಲ ಮಹಿಳೆಯರಿಗಾಗಿಯೇ ಮೀಸಲಾದ ಕ್ಲಿನಿಕ್ಗಳು. ಇಲ್ಲಿ ನುರಿತ ಸ್ತ್ರೀರೋಗ ತಜ್ಞರು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆ, ಚಿಕಿತ್ಸೆ ಹಾಗೂ ಆರೋಗ್ಯ ಸಲಹೆಗಳನ್ನು ನೀಡಲಿದ್ದಾರೆ ಎಂದು ತಿಳಿಸಿದರು.
ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಮುಟ್ಟಿನ ತೊಂದರೆ, ಮಧುಮೇಹ, ರಕ್ತದೊತ್ತಡ, ಬೊಜ್ಜು, ಸಂಧಿವಾತ ಇತ್ಯಾದಿ ಸಮಸ್ಯೆಗಳಿಗೆ ಚಿಕಿತ್ಸೆ, ಗರ್ಭಿಣಿಯರಿಗೆ 9 ತಿಂಗಳ ಕಾಲ ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಮತ್ತು ನವಜಾತ ಶಿಶುಗಳ ಸಮಗ್ರ ಅರೈಕೆಯ ಸಲಹೆ, ಗರ್ಭನಿರೋಧಕ ಸೇವೆಗಳು, ಕ್ಯಾನ್ಸರ್ ಸ್ಕ್ರೀನಿಂಗ್ ಸೇರಿ ಮಹಿಳೆಯರಿಗೆ ಸಂಬಂಧಿಸಿದ ಎಲ್ಲ ಬಗೆಯ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಮೆಡಿಕಲ್ ಸೀಟು ಪಡೆದವರೆಲ್ಲ ಗ್ರಾಮೀಣ ಸೇವೆ ಮಾಡಬೇಕೆಂಬ ಕಾನೂನು ಸಡಿಲಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣ ಭಾಗದ ಸರ್ಕಾರಿ ಆರೋಗ್ಯ ಸೇವೆಯಲ್ಲಿ ವೈದ್ಯರ ಕೊರತೆ ಗಂಭೀರವಾಗಿ ಬಾಧಿಸಿದ ಕಾರಣ ರಾಜ್ಯದಲ್ಲಿ ಮೆಡಿಕಲ್ ಶಿಕ್ಷಣ ಪೂರೈಸಿದವರು ಗ್ರಾಮೀಣ ಸೇವೆ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿತ್ತು.