World Rabies Day ಪ್ರತಿಯೊಬ್ಬರೂ ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳುವುದರಿಂದ ಸದೃಢ ಆರೋಗ್ಯ ನಮ್ಮದಾಗಿಸಿಕೊಳ್ಳಬಹುದಾಗಿದೆ. ಒಳ್ಳೆಯ ಆಹಾರ ಸೇವನೆ ಹಾಗೂ ದಿನನಿತ್ಯ ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ವಿಶ್ವ ರೇಬಿಸ್ ದಿನ ಹಾಗೂ ವಿಶ್ವ ಹೃದಯ ದಿನ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಮತ್ತು ಸೈಕಲ್ ಕ್ಲಬ್ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಿದ್ದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರೇಬೀಸ್ ಒಂದು ಮಾರಣಾಂತಿಕ ಖಾಯಿಲೆಯಾಗಿದ್ದು, ಸೋಂಕಿತ ಪ್ರಾಣಿ ಕಡಿತ, ವಿಶೇಷವಾಗಿ ನಾಯಿ ಕಡಿತದಿಂದ ಹರಡುತ್ತದೆ. ನಾಯಿ ಕಡಿತಕ್ಕೆ ಒಳಗಾದ ವ್ಯಕ್ತಿ ತಕ್ಷಣ ವೈದ್ಯರಲ್ಲಿಗೆ ತೆರಳಿ ಸೂಕ್ತ ಲಸಿಕೆ ಹಾಕಿಸಿಕೊಂಡಲ್ಲಿ ರೇಬೀಸ್ ಅನ್ನು ಶೇ. 100 ರಷ್ಟು ನಿಯಂತ್ರಿಸಬಹುದು. ಪ್ರಾಣಿ ಕಡಿತದ ನಂತರವೂ ಸೂಕ್ತ ಲಸಿಕೆ ಪಡೆದಲ್ಲಿ ರೇಬೀಸ್ ನಿಂದ ಪಾರಾಗಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ, ಪ್ರತಿದಿನ 30 ನಿಮಿಷ ಲಘು ವ್ಯಾಯಾಮ, ಸಮತೋಲನ ಆಹಾರ ಹವ್ಯಾಸಗಳನ್ನು ಪಾಲಿಸಬೇಕು. ಮದ್ಯಪಾನ, ತಂಬಾಕು ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಹೃದಯದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ನಾಯಿ ಸಾಕಿರುವವರು ತಪ್ಪದೇ ನಾಯಿಗೆ ರೇಬಿಸ್ ಲಸಿಕೆ ಹಾಕಿಸಬೇಕು. ನಾಯಿ ಅಥವಾ ಇತರ ಪ್ರಾಣಿ ಕಡಿತಕ್ಕೆ ಒಳಗಾಗುವ ಅಪಾಯವಿರುವವರು ಕಡಿತಕ್ಕೊಳಗಾಗುವ ಮುನ್ನವೇ ರೇಬೀಸ್ ವಿರುದ್ಧದ ಲಸಿಕೆ ಪಡೆದಲ್ಲಿ ಮುಂದೆನಾದರೂ ಪ್ರಾಣಿ ಕಡಿತಕ್ಕೊಳಗಾದಲ್ಲಿ ರೇಬೀಸ್ ನಿಂದ ಪಾರಾಗಬಹುದು ಎಂದು ತಿಳಿಸಿದರು.
World Rabies Day ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ ಓ ಮಾತನಾಡಿ, ರೇಬೀಸ್ ವಿರುದ್ಧದ ಲಸಿಕೆ ಮತ್ತು ಆರ್. ಐ. ಜಿ. ಚುಚ್ಚು ಮದ್ದು ಸಾಕಷ್ಟು ದಾಸ್ತಾನು ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿದ್ದು, ನಾಯಿ, ಬೆಕ್ಕು ಇತರೆ ಯಾವುದೇ ಪ್ರಾಣಿ ಕಡಿತಕ್ಕೆ ಒಳಗಾದ ವ್ಯಕ್ತಿಗಳಿಗೆ ಉಚಿತವಾಗಿ ಸಿಗಲಿದೆ ಎಂದರು.
ರೇಬೀಸ್ ಒಂದು ನೋಟಿಫೈಯಬಲ್ ಡಿಸೀಜ್ ಆಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ರೀಬೀಸ್ ರೋಗಿಯು
ದಾಖಲಾದಲ್ಲಿ ಸರ್ಕಾರಕ್ಕೆ ವರಧಿ ಮಾಡಬೇಕಾಗುತ್ತದೆ. ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮವು 2030ರೊಳಗಾಗಿ ಭಾರತವನ್ನು ರೇಬೀಸ್ ಮುಕ್ತ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.
ಸೈಕಲ್ ಜಾಥಾದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯರು ಪಾಲ್ಗೊಂಡಿದ್ದರು. ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಕಿರಣ್ ಎಸ್.ಕೆ, ಶಿವಮೊಗ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಜಿ ಬಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಸಾಂಕ್ರಾಮಿಕ ರೋಗ ತಜ್ಞೆ ಡಾ ದಿವ್ಯ, ಕಾರ್ಯಕ್ರಮ ಸಂಯೋಜಕ ಡಾ. ಅಫೀಫಾ ನದಾಫ್, ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಗಿರೀಶ್ ಕಾಮತ್, ನರಸಿಂಹಮೂರ್ತಿ, ಹರೀಶ್ ಪಟೇಲ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.
