Department of Health ಎಚ್ಐವಿ, ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕ. ಏಡ್ಸ್ ರೋಗದ ಬಗ್ಗೆ ಅಗತ್ಯ ಮಾಹಿತಿ ಎಲ್ಲರಿಗೂ ತಿಳಿದಿರಬೇಕು ಎಂದು ಶಿವಮೊಗ್ಗ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಸೂಪರ್ವೈಸರ್ ಶ್ರೀಮತಿ ಮಂಗಳಾ ರಂಗನಾಥ್ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸಿಂಗಾರ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ, ರೆಡ್ ರಿಬ್ಬನ್ ಕ್ಲಬ್ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಶಿವಮೊಗ್ಗ ಸಹಯೋಗದಲ್ಲಿ ಆಯೋಜಿಸಿದ್ದ ಎಚ್ಐವಿ, ಏಡ್ಸ್ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಇಲಾಖೆ ವತಿಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮಾಹಿತಿ ಕೊರತೆಯಿಂದ ಅನೇಕರು ಏಡ್ಸ್, ಎಚ್ಐವಿ ಕಾಯಿಲೆಗೆ ತುತ್ತಾಗುತ್ತಿದ್ದು, ಅಗತ್ಯ ಜಾಗೃತಿ ವಹಿಸದಿದ್ದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಯುವಜನರು ಸೂಕ್ತ ತಿಳವಳಿಕೆ ಹೊಂದಬೇಕು ಎಂದು ತಿಳಿಸಿದರು.
Department of Health ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ವೈದ್ಯರ ಮಾರ್ಗದರ್ಶನ ಪಡೆಯುವುದು ಅತ್ಯಂತ ಅಗತ್ಯವಿದ್ದು, ಕಾಯಿಲೆ ಲಕ್ಷಣ ಕಂಡುಬಂದಲ್ಲಿ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಕುಮಾರಸ್ವಾಮಿ.ಎನ್., ಎನ್ಎಸ್ಎಸ್ ಅಧಿಕಾರಿ ಮಲ್ಲಿಕಾರ್ಜುನ.ಎ.ಎನ್., ಕೇತನಾ ಆರ್ತಿ.ಎನ್., ಡಾ. ಶಿವಶಂಕರ್ ಎಂ.ಕಿನ್ನಾಳ್, ಸೌಂದರ್ಯ, ಬಿಂದು, ವನಿತಾ, ಕವನ, ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.