Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿ ಗಳವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ, ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದ್ದು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕೂಡ ನಡೆಯುವುದು.೧೯೯೮ ರಂದು ನಿರ್ಮಿಸಿದ ಶ್ರೀ ಆದಿಚುಂಚನಗಿರಿ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಇಂದು 25ರ ಸಂಭ್ರಮ.
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯುವ ಈ ಶುಭ ವಿವಾಹ ಅಂದಿನಿಂದ ಇಂದಿನವರೆಗೆ ಸರಿಸುಮಾರು ೫೦೦ ಕ್ಕಿಂತ ಹೆಚ್ಚು ದಾಂಪತ್ಯ ಜೀವನಗಳನ್ನು ಕಟ್ಟಿಕೊಟ್ಟಿದೆ.
ಇಂದಿನ ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ.ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡುತ್ತಾರೆ.
ಶ್ರೀ ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಇಂತಹ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳನ್ನು ಎಂತಹುದೇ ಸಂದರ್ಭದಲ್ಲಿ ನಿಲ್ಲಿಸದೇ ಕಳೆದ ೨೫ ವರ್ಷಗಳಿಂದ ನಿರಂತರವಾಗಿ, ವೈಭವಯುತವಾಗಿ ನಡೆಸಿಕೊಂಡು ಬರುತ್ತಿರುವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪ್ರಯತ್ನ ಶ್ಲಾಘನೀಯ ಹಾಗೂ ಗೌರವಾನ್ವಿತವಾದುದೇ ಹೌದು.
Adichunchanagiri Mutt ಈ ಬಾರಿಯ 25ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್ 24 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ ಹೋಮ, ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ನಂತರ ಬೆಳಿಗ್ಗೆ 8 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಉಪಸ್ಥಿತರಿರುವರು .ಈ ಎಲ್ಲಾ ಕಾರ್ಯಕ್ರಮದಲ್ಲಿ ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಇಡೀ ದಿನ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.
