DVS College of Arts, Science and Commerce ಯುವ ವಿದ್ಯಾರ್ಥಿಗಳು ಮೊಬೈಲ್ ಸೇರಿ ಆಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಯಥೇಚ್ಚವಾಗಿ ಬಳಸಬಾರದು. ತಂತ್ರಜ್ಞಾನದ ಧನಾತ್ಮಕ ಅಂಶಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕಿ ಕೆ.ವಿ.ಜ್ಯೋತಿಕುಮಾರಿ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜ್ ಮತ್ತು ಐಕ್ಯೂಎಸಿ ಘಟಕದಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಡಿವಿಎಸ್ ಸಾರಂಗ್ 2024” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಯುವ ವಿದ್ಯಾರ್ಥಿಗಳು ಮೊಬೈಲ್ಗೆ ದಾಸರಾಗುತ್ತಿದ್ದು, ಹೆಚ್ಚು ಸಮಯ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಕಲಿಕೆಯ ದೃಷ್ಟಿಯಿಂದ ಸೀಮಿತವಾಗಿ ಬಳಸಬೇಕು. ಹೆಚ್ಚಿನ ಸಮಯವನ್ನು ಅಧ್ಯಯನಕ್ಕೆ ಮೀಸಲಿಡಬೇಕು. ಸ್ವಾಮಿ ವಿವೇಕಾನಂದ ಸೇರಿದಂತೆ ಮಹನೀಯರ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಎಂದು ಸಲಹೆ ನೀಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಭಾರತ ದೇಶವು ಅತ್ಯಂತ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದು, ಯುವಜನತೆ ದೇಶದ ಐತಿಹಾಸಿಕ ಸಂಗತಿ ಹಾಗೂ ಶ್ರೀಮಂತಿಕೆಯನ್ನು ಅರಿತುಕೊಳ್ಳಬೇಕು. ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಪ್ರತಿಭೆಯು ಇದ್ದು, ಸೂಕ್ತ ಮಾರ್ಗದರ್ಶನ ಹಾಗೂ ನಿರಂತರ ಅಭ್ಯಾಸ ಪ್ರಕ್ರಿಯೆಯಿಂದ ಪ್ರತಿಭೆ ಅನಾವರಣ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
DVS College of Arts, Science and Commerce ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಸಾಂಸ್ಕೃತಿಕ ವೇದಿಕೆಗಳು ಸಹಕಾರಿ ಆಗುತ್ತವೆ ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಛಾಯಾಗ್ರಾಹಕ ಶಿವಮೊಗ್ಗ ನಂದನ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಾಂಸ್ಕೃತಿಕ ಸಂಯೋಜಕಿ ಎನ್.ಕೇತನಾ ಆರ್ತಿ, ನಿವೃತ್ತ ಉಪನ್ಯಾಸಕ ಕೆ.ಎ.ಭಾಸ್ಕರ್, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.