Jaljeevan Mission Scheme ಗ್ರಾಮೀಣ ಭಾಗದ ಜನರಿಗೆ ಶುದ್ಧವಾದ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಿ, ಸಮಸ್ಯೆಯಿಂದ ಜನರನ್ನು ಹೊರ ತರುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯ ಸಮರ್ಪಕ ಅನುಷ್ಟಾನಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯ ಕೆಲವು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂದಿರುವ ನಿವೇಶನ, ಅರಣ್ಯಭೂಮಿ ಮತ್ತಿತರ ಸಮಸ್ಯೆ-ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪೈಪ್ಲೈನ್ಅಳವಡಿಸಲು ಸವಾಲುಗಳು ಎದುರಾಗಿವೆ. ಅಲ್ಲದೆ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಆಯ್ಕೆಗೊಳಿಸಿರುವ ಭೂಮಿ ಅರಣ್ಯ ಇಲಾಖೆಗೆ ಒಳಪಟ್ಟಿದ್ದು, ಅರಣ್ಯ ನಿಯಮಗಳು ಅಡಚಣೆಯಾಗಿವೆ. ಆದ್ದರಿಂದ ಅಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ದೊರೆಯುವ ಸೂಕ್ತ ಹಾಗೂ ಪರ್ಯಾಯ ಸ್ಥಳಗಳನ್ನು ಗುರುತಿಸಿ ಕಾಲಮಿತಿಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಮುಂದಾಗುವಂತೆ ಅವರು ತಿಳಿಸಿದರು.
Jaljeevan Mission Scheme ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನೀರಿನ ಸ್ಥಾವರಗಳ ನಿರ್ಮಾಣಕ್ಕೆ ಒಂದು ಅಥವಾ ಒಂದಕ್ಕಿಂತ ಹೆಚ್ಚು ಸೂಕ್ತವಾದ ಸ್ಥಳಗಳನ್ನು ಗುರುತಿಸಬೇಕು. ಅರಣ್ಯಭೂಮಿಗೆ ಹೊಂದಿಕೊಂಡಂತಿರುವ ಸ್ಥಳಗಳಲ್ಲಿ ಕಾಮಗಾರಿ ನಡೆಯುತ್ತಿದ್ದಲ್ಲಿ ಅರಣ್ಯ ರಕ್ಷಕರು ಯೋಜನೆಯ ಅನುಷ್ಠಾನಕ್ಕೆ ಸೂಕ್ತ ಸಹಕಾರ ನೀಡುವಂತೆ ಅವರು ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದು ನೀರಿಗಾಗಿ ನಿರೀಕ್ಷಿಸುತ್ತಿರುವವರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿಯ ಅನುಷ್ಠಾನದಲ್ಲಿ ಯಾವುದೇ ಕ್ಷುಲ್ಲಕ ಕಾರಣಕ್ಕಾಗಿ ಕಾಮಗಾರಿ ಸ್ಥಗಿತಗೊಳ್ಳದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದವರು ನುಡಿದರು.
ಈ ಕಾರ್ಯದ ಸಮರ್ಪಕ ಅನುಷ್ಠಾನದಲ್ಲಿ ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಗ್ರಾಮ ಪಂಚಾಯಿತಿ, ಕಂದಾಯ ಮತ್ತು ಅರಣ್ಯ ಇಲಾಖಾಧಿಕಾರಿಗಳ ನಡುವೆ ಪರಸ್ಪರ ಹೊಂದಾಣಿಕೆ ಇದ್ದು, ಕೈಗೊಂಡ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಲು ಗಮನಹರಿಸುವಂತೆ ಸೂಚಿಸಿ ಅವರು, ಜಲ ಜೀವನ್ ಮಿಷನ್ ಯೋಜನೆಯ ಯಶಸ್ವಿಗೆ ಸಮುದಾಯದ ಸಹಭಾಗಿತ್ವವೂ ತುಂಬಾ ಮುಖ್ಯವಾಗಿದೆ ಎಂದರು.
ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ನಿಗಧಿಪಡಿಸಿದ ಅವಧಿ ಮೀರಿ ಹೋಗುತ್ತಿದ್ದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಅಧಿಕಾರಿಗಳು ಕಾಲವಿಳಂಬಕ್ಕೆ ಅವಕಾಶವಿಲ್ಲದಂತೆ ಯೋಜನೆಯ ಅನುಷ್ಠಾನಕ್ಕೆ ಮುಂದಾಗುವಂತೆ ಹಾಗೂ ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
.