ಸೊರಬ ಪಟ್ಟಣದಲ್ಲಿನ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಿರಿದಾದ ರಸ್ತೆಯಲ್ಲಿ ಎಲ್ಲೆಂದರೆಲ್ಲಿ ವಾಹನಗಳ ನಿಲುಗಡೆ ಹಾಗೂ ಸಂಚಾರದಿಂದ ಸರಣಿ ಅಪಘಾತಗಳು ನಿರಂತರವಾಗಿ ಜರುಗುತ್ತಿವೆ. ಜನರ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ಪಿಎಸ್ಐ ಎಂ.ಎಚ್. ನವೀನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ವೇದಿಕೆಯ ನಗರ ಘಟಕದ ಅಧ್ಯಕ್ಷ ಜಿ. ಕೆರಿಯಪ್ಪ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದು ಒತ್ತಾಯಿಸಿದರು.
ಮುಖ್ಯ ರಸ್ತೆಯ ಎರಡು ಇಕ್ಕೆಲಗಳಲ್ಲಿ ವಾಹನ ಚಾಲಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿದ್ದಾರೆ. ಇತರೆ ವಾಹನಗಳು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಗುತ್ತಿದ್ದು, ಪಟ್ಟಣದಲ್ಲಿ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದೆ. ವಾಹನ ನಿಲುಗಡೆಗೆ ಸರಿಯಾದ ನಿಯಮಾವಳಿಗಳನ್ನು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಪಿಎಸ್ಐ ಎಂ.ಎಚ್. ನವೀನ್ ಕುಮಾರ್ ಮಾತನಾಡಿ, ಈಗಾಗಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗಿದೆ. ಅಪ್ರಾಪ್ತರು ಮತ್ತು ಸಮರ್ಪಕ ದಾಖಲೆಗಳು ಇಲ್ಲದ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿ ವಾಹನ ದಟ್ಟಣೆ ತಡೆಗಟ್ಟಲು ರಸ್ತೆಯ ಎಡ ಮತ್ತು ಬಲ ಭಾಗದಲ್ಲಿ ಒಂದು ದಿನದಂತೆ ವಾಹನ ನಿಲ್ಲಿಸುವ ಕುರಿತು ಕ್ರಮ ವಹಿಸುವುದಾಗಿ ತಿಳಿಸಿದರು.
ವೇದಿಕೆಯ ಗೌರವಾಧ್ಯಕ್ಷ ಎಚ್. ನಾಗರಾಜ್, ಉಪಾಧ್ಯಕ್ಷ ಪ್ರಕಾಶ್ ಆಟೋ, ಸಂತೋಷ ಸೊಪ್ಪಿನಕೇರಿ, ಪ್ರಮುಖರಾದ ಮಹೇಶ್ ಖಾರ್ವಿ, ಅಭಿ ಹೋಯ್ಸಳ, ವಿನಾಯಕ, ರಾಘವೇಂದ್ರ ಮಡಿವಾಳ, ಸುನೀಲ, ಶಶಿ ಸೇರಿದಂತೆ ಇತರರಿದ್ದರು.
