India Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರಗಳು ಮಕ್ಕಳಲ್ಲಿ ಕ್ರಿಯಾಶೀಲ ಮನೋಭಾವ ಬೆಳೆಸುತ್ತವೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಹೇಳಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ರೋವರ್ಸ್ ರೆಂಜರ್ಸ್ ಗಳಿಗೆ ಆಯೋಜಿಸಿದ್ದ ಮೂರು ದಿನಗಳ ನಿಪುಣ್ ಪದವಿ ಪರೀಕ್ಷಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ನಡೆಯುವ ವಿವಿಧ ರೀತಿಯ ತರಬೇತಿ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಮತ್ತು ಕೌಶಲ್ಯಗಳನ್ನು ವೃದ್ಧಿಸುತ್ತವೆ ಎಂದು ತಿಳಿಸಿದರು.
ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಇದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ. ಹೊಸ ಹೊಸ ವಿಷಯಗಳು ಅನಾವರಣಗೊಳ್ಳುತ್ತವೆ. ಪ್ರಪಂಚಾದ್ಯಂತ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ 200ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ತನ್ನದೇ ಆದ ಸೇವೆಗಳ ಮುಖಾಂತರ ಪ್ರಚಲಿತವಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ಒಂದು ಶಿಸ್ತುಬದ್ಧ ಹಾಗೂ ವ್ಯವಸ್ಥಿತವಾದ ಸೇವಾ ಸಂಸ್ಥೆಯಾಗಿದೆ. ಇದರಲ್ಲಿ ತರಬೇತಿ ಹಾಗೂ ಪರಿಣಿತಿ ಹೊಂದಿದವರು ಆತ್ಮವಿಶ್ವಾಸದಿಂದ ಎಲ್ಲ ಕ್ಷೇತ್ರಗಳಲ್ಲೂ ವಿಶೇಷವಾದ ಸಾಧನೆ ಮಾಡಲು ಅವಕಾಶವಾಗುತ್ತದೆ ಎಂದು ತಿಳಿಸಿದರು.
ಶಿಬಿರದ ನಾಯಕ ಎ.ವಿ.ರಾಜೇಶ್ ನಿಪುಣ್ ಪರೀಕ್ಷೆಯ ಬಗ್ಗೆ ಸಮಗ್ರ ಮಾಹಿತಿ ಹಾಗೂ ಅದರಲ್ಲಿ ಕಲಿಯಬಹುದಾದ ವಿಶೇಷ ವಿಷಯಗಳು ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಮನೆ ಮನೆಗಳಿಗೂ ಸ್ಕೌಟ್ಸ್ ಮತ್ತು ಗೈಡ್ಸ್ ತಲುಪಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಈ ಚಳುವಳಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
India Scouts and Guides ಶಿಬಿರದ ಅಧ್ಯಕ್ಷತೆಯನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶಕುಂತಲಾ ಚಂದ್ರಶೇಖರ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಮಕ್ಕಳು, ಶಿಕ್ಷಕರಿಗೆ ವಿಶೇಷ ತರಬೇತಿ ಶಿಬಿರವನ್ನು ತಾಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಇಂತಹ ಪರೀಕ್ಷೆಗಳಲ್ಲಿ ಪಾಸಾದ ವಿದ್ಯಾರ್ಥಿಗಳು ಮುಂದೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದರು.
ರೋವರ್ ವಿಭಾಗದ ಜಿಲ್ಲಾ ಆಯುಕ್ತ ರವಿ ಕೆ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ ಕೆ ವಿ, ಗೈಡ್ ಆಯುಕ್ತ ಲಕ್ಷ್ಮೀ ರವಿ, ಕೃಷ್ಣಸ್ವಾಮಿ, ಪರಮೇಶ್ವರಯ್ಯ, ಸದಾಶಿವ, ವಿನಯ ಭೂಷಣ್, ವೆಂಕಟೇಶ್, ರುದ್ರಪ್ಪ ಚೀಲೂರ್ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
