DC Shivamogga ತೀರ್ಥಹಳ್ಳಿ, ಹೊಸನಗರ, ಸಾಗರ ಮಲೆನಾಡು ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕಂಡುಬರುವ ಮಂಗನಕಾಯಿಲೆಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಪ್ರಾಥಮಿಕ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಂಗನ ಕಾಯಿಲೆ ಬಾದಿತ ಪ್ರದೇಶಗಳಲ್ಲಿ ಉಣುಗುಗಳ ನಿಯಂತ್ರಣ ಕುರಿತು ಸರ್ವೇಕ್ಷಣೆ, ಮಂಗಗಳ ಅಸಹಜ ಸಾವಿನ ಕುರಿತು ಸರ್ವೇಕ್ಷಣೆ ಹಾಗೂ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜ್ವರ ಸಮೀಕ್ಷೆ ಮಾಡುವಂತೆ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದವರು ನುಡಿದರು.
ಮಲೆನಾಡು ಭಾಗಗಳ ಅರಣ್ಯ ಪ್ರದೇಶಗಳಲ್ಲಿ ಸುತ್ತಾಡುವ ಸಾರ್ವಜನಿಕರು, ರೈತರು ಸುರಕ್ಷತಾ ಕ್ರಮವಾಗಿ ಆರೋಗ್ಯ ಇಲಾಖೆಯು ಉಚಿತವಾಗಿ ಒದಗಿಸುವ ಡೀಪಾ ತೈಲವನ್ನು ಲೇಪಿಸಿಕೊಳ್ಳುವಂತೆ ಸೂಚಿಸಿದ ಅವರು, ಜ್ವರ, ಶೀತ, ತಲೆನೋವು, ವಾಂತಿ, ಮೈಕೈ ನೋವು, ನವೆ ಮುಂತಾದ ಅಹಜವಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣದಲ್ಲಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಸಕಾಲಿಕವಾಗಿ ಸೂಕ್ತ ಚಿಕಿತ್ಸೆಪಡೆದುಕೊಳ್ಳುವಂತೆ ಅವರು ಸೂಚಿಸಿದರು.
ಯಾವುದೇ ವ್ಯಕ್ತಿ ಸೋಂಕಿಗೆ ತುತ್ತಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಯ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ದಿನದ 24ಗಂಟೆಯೊಳಗಾಗಿ ವರದಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ಎಲ್ಲಾ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಸೋಂಕಿನ ನಿಯಂತ್ರಣದಲ್ಲಿ ಸ್ಥಳೀಯರ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು ಎಂದ ಅವರು, ಡೀಪಾ ತೈಲವು ಮಂಗನ ಕಾಯಿಲೆ ಮಾತ್ರವಲ್ಲ ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೂ ಸಹಕಾರಿಯಾಗಲಿದೆ ಎಂದರು.
ಮಂಗನ ಕಾಯಿಲೆಯ ನಿಯಂತ್ರಣ ಕ್ರಮದ ಭಾಗವಾಗಿ ಸ್ಥಳೀಯ ಜನರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು. ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯೊಳಗಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ಜನರೂ ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಅಹಜವಾಗಿ ಮಂಗಗಳ ಸಾವು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.ಹೇಮಂತ್ ಅವರು ಹೇಳಿದ್ದಾರೆ. ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಗಳನ್ನು ಕರೆದು, ಅಗತ್ಯ ಕ್ರಮಗಳನ್ನು ನಿರ್ವಹಿಸಲು ಇಲಾಖೆಯ ಅಧೀನ ಅಧಿಕಾರಿ-ಸಿಬ್ಬಂಧಿಗಳಿಗೆ ಸೂಚನೆ ರವಾನಿಸಬೇಕು ಎಂದ ಅವರು, ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಿ, ವಿಶೇಷ ಗಮನಹರಿಸುವ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಯಾವುದೇ ಸಾವು-ನೋವುಗಳು ಸಂಭವಿಸದಂತೆ ಕ್ರಮ ವಹಿಸಬೇಕು. ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸೂಚಿಸಿದರು.
ಜಿಲ್ಲೆಯಲ್ಲಿ ಬಾಣಂತಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ, ನಿಯಂತ್ರಣ ಕ್ರಮ ಅನುಸರಿಸಬೇಕಾದ ಅಗತ್ಯವಿದೆ. ಆದ್ದರಿಂದ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತರಾದ ಗರ್ಭಿಣಿ, ಬಾಣಂತಿ ಸಾವಿನ ಪ್ರಕರಣಗಳ ಕುರಿತು ತಜ್ಞ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಪರಿಶೀಲನೆ ನಡೆಸಿ, ಮುಂದಿನ 15ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು – ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕಳೆದ ಜನವರಿ ಮಾಹೆಯಿಂದೀಚೆಗೆ ಜಿಲ್ಲೆಯಲ್ಲಿ 7380ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 76ಪ್ರಕರಣಗಳನ್ನು ಗುರುತಿಸಿ, ಸಕಾಲಿಕವಾಗಿ ಚಿಕಿತ್ಸೆ ನೀಡಲಾಗಿದೆ. ಎರಡು ಜೀವಹಾನಿ ಪ್ರಕರಣಗಳು ದಾಖಲಾಗಿವೆ. ಅಸಹಜವಾಗಿ 185 ಮಂಗಗಳ ಸಾವನ್ನೂ ಗುರುತಿಸಿ, ಎಚ್ಚರಿಕೆ ಕ್ರಮ ವಹಿಸಲಾಗಿದೆ. ಅಲ್ಲದೆ ಸರ್ಕಾರದ ಮಾರ್ಗಸೂಚಿಯಂತೆ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಮೆಗ್ಗಾನ್ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್ಕಾಲೇಜು ಮತ್ತು ಕೆ.ಎಂ.ಸಿ. ಮಣಿಪಾಲ್ನಲ್ಲಿ ಒಳರೋಗಿಯಾಗಿ ದಾಖಲಾದ ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದವರು ತಿಳಿಸಿದರು.
ಜಿಲ್ಲಾಡಳಿತವು ಅರಣ್ಯ, ಆರೋಗ್ಯ, ಕಂದಾಯ, ಪಶುಸಂಗೋಪನೆ, ಪಂಚಾಯತ್ರಾಜ್ಇಲಾಖೆಗಳ ಸಹಯೋಗದೊಂದಿಗೆ ಎಲ್ಲಾ ರೀತಿಯ ಮುಂಜಾಗ್ರತಾ ನಿಯಂತ್ರಣ ಕ್ರಮ ವಹಿಸಲಾಗಿದೆ ಎಂದ ಅವರು ಮಂಗನಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ನಿಯಂತ್ರಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದವರು ತಿಳಿಸಿದರು.
DC Shivamogga ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಲ್ಸ್ಪೋಲಿಯೋ ಕಾರ್ಯಕ್ರಮದ ಮೊದಲ ಸುತ್ತಿನ ಲಸಿಕಾ ಆಂದೋಲನವು ಡಿಸೆಂಬರ್21ರ ಭಾನುವಾರದಂದು ಬೆಳಿಗ್ಗೆ 8 ರಿಂದ ಸಂಜೆ 5ಗಂಟೆಯವರೆಗೆ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಾದ್ಯಂತ 5ವರ್ಷದೊಳಗಿನ 1,23,338 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1016ಬೂತ್ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ.
1905ತಂಡಗಳನ್ನು ನೇಮಿಸಿದ್ದು, 193ಜನರನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಸೂಚಿಸಲಾಗಿದೆ ಎಂದರು. ಈ ಲಸಿಕಾ ಆಂದೋಲನ ನಡೆಯಲಿರುವ ಅವಧಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಸಿಕೆ ಹಾಕಲು ಮಾಹಿತಿ ನೀಡಿ, ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುವಲ್ಲಿ ಶ್ರಮಿಸುವಂತೆ ಸೂಚಿಸಿದ ಅವರು, ನಿಗಧಿಪಡಿಸಲಾಗಿರುವ ದಿನಕ್ಕೂ ಮುನ್ನವೇ ಜನರಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ಡಾ|| ನಾಗರಾಜ್ನಾಯ್ಕ್, ಡಾ|| ಸಿದ್ಧನಗೌಡಪಾಟೀಲ್, ಡಾ|| ಮಲ್ಲಪ್ಪ, ಡಾ|| ಸ್ಮೃತಿ ಸಿ.ರಾಜ್, ಡಾ|| ಅನುಷಾ ಜಿ.ಕೆ., ಡಾ|| ಶಾಂತಕುಮಾರ್, ಡಾ|| ಪ್ರಶಾಂತ್, ಡಾ|| ನಾರಾಯಣ್ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.
