ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಉಪಕರಣಗಳ ಅಳವಡಿಕೆ ಕಾಮಗಾರಿ ಶೀಘ್ರ ಬೇಗ ಪೂರ್ಣಗೊಳಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಒತ್ತಾಯಿಸಿದರು.
2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗಿ ಕರ್ನಾಟಕ ಸರ್ಕಾರ ನಿರ್ವಹಿಸಿದ ಪ್ರಥಮ ವಿಮಾನ ನಿಲ್ದಾಣ. 3 ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸುಗಮ ಸೇವೆ ನೀಡಿದೆ. ಪ್ರಸ್ತುತ ಬೆಂಗಳೂರು, ಗೋವಾ, ಚೆನ್ನೈ, ತಿರುಪತಿ ಮತ್ತು ಹೈದರಾಬಾದ್ಗೆ ವಿಮಾನಗಳನ್ನು ಹೊಂದಿದೆ. ನೈಟ್ ಲ್ಯಾಂಡಿAಗ್ ವ್ಯವಸ್ಥೆ ಪೂರ್ಣಗೊಂಡ ಬಳಿಕ ನವದೆಹಲಿ ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳೊಂದಿಗೆ ನೇರ ವಿಮಾನ ಸಂಪರ್ಕ ಸಿಗಲಿದೆ ಎಂದರು.
ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಬಾಕಿ ಇರುವ ಸಿವಿಲ್ ಕಾಮಗಾರಿ ಮತ್ತು ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಅಗತ್ಯವಾದ ಉಪಕರಣಗಳ ಅಳವಡಿಕೆಗೆ ಕಾಮಗಾರಿಗಳು ವಿಳಂಬ ಆಗುತ್ತಿದೆ. ಈ ಉಪಕರಣಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಹಣವನ್ನು ಬಿಡುಗಡೆ ಮಾಡಿದ್ದರೂ ಅಳವಡಿಕೆ ಕಾರ್ಯ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.
ನೈಟ್ ಲ್ಯಾಂಡಿಂಗ್ ವ್ಯವಸ್ಥೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ಮಲೆನಾಡಿನ ಆರ್ಥಿಕತೆ, ಪ್ರವಾಸೋದ್ಯಮ ಹಾಗೂ ಉದ್ಯೋಗಾವಕಾಶಗಳಿಗೆ ಇನ್ನಷ್ಟು ಶಕ್ತಿ ತುಂಬಿ ಜಿಲ್ಲೆಯ ವ್ಯಾಪಾರ ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು. ಸಚಿವರು ಸಂಘದ ಅಹವಾಲು ಸ್ವೀಕರಿಸಿ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿ ನೈಟ್ ಲ್ಯಾಂಡಿಂಗ್ ಕಾಮಗಾರಿಗಳು ಬೇಗನೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಆದ ಹೆಚ್.ಸಿ ಯೋಗೇಶ್ ಅವರು ಮಾತನಾಡುತ್ತಾ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಅತಿ ಅವಶ್ಯಕವಾಗಿದ್ದು ಉಪಮುಖ್ಯಮಂತ್ರಿಗಳು ಈ ದಿಸೆಯಲ್ಲಿ ಸ್ಪಂದಿಸುವ ಭರವಸೆ ನೀಡಿದ್ದು ಸಂತಸ ತಂದಿದೆ ಎಂದರು
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ನ ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಸಾಗರ ರಸ್ತೆ ಕೈಗಾರಿಕಾ ಸಂಘದ ಕೆ ಬಿ ಶಿವಕುಮಾರ್ ಇದ್ದರು.
