S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಹಂಪಿ ಮತ್ತು ಕರಾವಳಿ ಉತ್ಸವಗಳ ಮಾದರಿಯಲ್ಲಿ ‘ಸಹ್ಯಾದ್ರಿ ಉತ್ಸವ’ ಅಥವಾ ‘ಮಲೆನಾಡು ಉತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಬೇಕು ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು ಸರ್ಕಾರವನ್ನು ಒತ್ತಾಯಿಸಿದರು.
ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಸಾಂಸ್ಕೃತಿಕ ಉತ್ಸವಗಳು ನಡೆಯದ ಕಾರಣ ಜಿಲ್ಲೆಯ ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಶಾಸಕರು, ಶಿವಮೊಗ್ಗ ಜಿಲ್ಲೆಯು ರಾಷ್ಟ್ರಕವಿ ಕುವೆಂಪು ಸೇರಿದಂತೆ ಅನೇಕ ಸಾಹಿತ್ಯ ದಿಗ್ಗಜರ ಹಾಗೂ ಜಾನಪದ ಕಲಾ ಪ್ರಕಾರಗಳ ಬೀಡಾಗಿದೆ. ಇಂತಹ ಶ್ರೀಮಂತ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸಲು ಕನಿಷ್ಠ ಮೂರು ದಿನಗಳ ಕಾಲ ಜಿಲ್ಲಾ ಉತ್ಸವವನ್ನು ಆಯೋಜಿಸುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.
ಜಿಲ್ಲೆಯ ಹಿರಿಯ ಸಾಧಕರನ್ನು ಗೌರವಿಸಲು ಮತ್ತು ಮಲೆನಾಡಿನ ಕಲಾ ಸೌಂದರ್ಯವನ್ನು ಜಾಗತಿಕ ಮಟ್ಟಕ್ಕೆ ತಲುಪಿಸಲು ಸರ್ಕಾರವು ಈ ಕೂಡಲೇ ಅನುದಾನ ಬಿಡುಗಡೆ ಮಾಡಿ ಉತ್ಸವಕ್ಕೆ ಚಾಲನೆ ನೀಡಬೇಕು ಎಂದು ಶಾಸಕ ಚನ್ನಬಸಪ್ಪ ಅವರು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.
S.N. Channabasappa ಶಾಸಕ ಚನ್ನಬಸಪ್ಪ ಅವರ ಈ ಪ್ರಸ್ತಾವನೆಗೆ ಸ್ವತಃ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಧ್ವನಿಗೂಡಿಸಿ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ, ಕಾರ್ಕಳ ಶಾಸಕ ಶ್ರೀ ಸುನೀಲ್ ಕುಮಾರ್, ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಹಾಗೂ ಗಂಗಾವತಿ ಶಾಸಕ ಶ್ರೀ ಜನಾರ್ದನ ರೆಡ್ಡಿ ಸೇರಿದಂತೆ ಅನೇಕರು ಜಿಲ್ಲಾವಾರು ಸಾಂಸ್ಕೃತಿಕ ಉತ್ಸವಗಳನ್ನು ಆಯೋಜಿಸುವ ಅಗತ್ಯತೆಯನ್ನು ಎತ್ತಿ ಹಿಡಿದರು. ಪಕ್ಷಾತೀತವಾಗಿ ವ್ಯಕ್ತವಾದ ಈ ಬೆಂಬಲವು ಸಾಂಸ್ಕೃತಿಕ ಸಂರಕ್ಷಣೆಯ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ ಎಂದರು.
