Prabhuling Kavalikatti ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ರವರ ಜಯಂತಿಯನ್ನು ಏ.5 ರಂದು ಕುವೆಂಪು ರಂಗಮಂದಿರದಲ್ಲಿ ಮತ್ತು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ರವರ ಜಯಂತಿಯನ್ನು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಕುರಿತು ಚರ್ಚಿಸಲು ಮಂಗಳವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಣೆ ಮಾಡುವಂತೆ ಹಾಗೂ ಪ್ರಚಾರಕ್ಕಾಗಿ ನಗರದ ಮುಖ್ಯ ಭಾಗಗಳಲ್ಲಿ ಫೆಕ್ಸ್ಗಳನ್ನು ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೂವಿನ ಅಲಂಕಾರ, ವೇದಿಕೆ, ವಿದ್ಯುತ್, ಕುಡಿಯುವ ನೀರು, ಲಘು ಉಪಹಾರ, ಪೊಲೀಸ್ ಬಂದೋಬಸ್ತ್, ಕಲಾತಂಡಗಳು, ಕಿರುಹೊತ್ತಿಗೆ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆರವಣಿಗೆ : ಡಾ.ಬಾಬು ಜಗಜೀವನರಾಂ ಜಯಂತಿಯಂದು ಸೈನ್ಸ್ ಮೈದಾನದಿಂದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಪಾಲಿಕೆಯಿಂದ ಈ ಮಹಾತ್ಮರ ಭಾವಚಿತ್ರಗಳನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬಂದು ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಪ್ರತಿಭಾ ಪುರಸ್ಕಾರ ಮತ್ತು ಹೋರಾಟಗಾರರಿಗೆ ಸನ್ಮಾನ : ಮಹಾತ್ಮರ ಜನ್ಮ ದಿನಾಚರಣೆಯಂದು ಅತಿ ಹೆಚ್ಚು ಅಂಕ ಗಳಿಸಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮುದಾಯಗಳ ಪರವಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಇಬ್ಬರು ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮಗಳು ಬೆಳಿಗ್ಗೆ 11 ಕ್ಕೆ ನಡೆಸಲಾಗುವುದು. ಮುಖಂಡರ ಸಲಹೆಯಂತೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
Prabhuling Kavalikatti ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ : ಡಾ.ಬಾಬು ಜಗಜೀವನರಾಂ ಭವನದ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಂಡಿಲ್ಲ. ಬಾಕಿ ಇರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಈಗ ಯಾವುದೇ ತೊಡಕು ಇಲ್ಲವಾಗಿದ್ದು ಇನ್ನು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಂಡು ಮೇ ಮಾಹೆಯಲ್ಲಿ ಉದ್ಘಾಟನೆಯಾಗಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ
ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ನಗರದಲ್ಲಿರುವ ಅಂಬೇಡ್ಕರ್ ನಗರಕ್ಕೆ ದೀಪಾಲಂಕಾರ ಹಾಗೂ ಪಾಲಿಕೆ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕಲು ಮೆಟ್ಟಿಲು ಅಥವಾ ಪೂರಕ ವ್ಯವಸ್ಥೆ ಮಾಡುವಂತೆ ಸಲಹೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಂಬೇಡ್ಕರ್ ನಗರದಲ್ಲಿ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಲು ಹಾಗೂ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಯನ್ನು ಪಾಲಿಷ್ ಮಾಡಿಸಿ, ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು ಹಾಗೂ ಮಾಲಾರ್ಪಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದ ಅವರು ಎಲ್ಲರೂ ಒಟ್ಟಾಗಿ ಸೇರಿ ಜಯಂತಿಯನ್ನು ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಎಎಸ್ಪಿ ಕಾರಿಯಪ್ಪ, ಜಿ.ಪಂ.ಉಪಕಾರ್ಯದರ್ಶಿ ಸುಜಾತ, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ, ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
