S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ ವ್ಯಸನ: ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ‘ವಿಶೇಷ ಕಾರ್ಯಪಡೆ’ ರಚಿಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ.
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರು ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಮತ್ತು ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ತಡೆಯಲು ಸರ್ಕಾರ ಕೂಡಲೇ ಪೊಲೀಸ್ ಇಲಾಖೆಯಲ್ಲಿ ‘ವಿಶೇಷ ಕಾರ್ಯಪಡೆ’ ರಚಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಸದನದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಮಾದಕ ದ್ರವ್ಯಗಳ ಜಾಲ ಹೆಮ್ಮರವಾಗಿ ಬೆಳೆಯುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಜನತೆ ದಾರಿ ತಪ್ಪಿ ಸಂಕೇತ್ ಹತ್ಯೆಯಂತಹ ಭೀಕರ ಅಪರಾಧಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಮಾಯಕ ಯುವಕರನ್ನು ಅಪರಾಧ ಲೋಕಕ್ಕೆ ಎಳೆಯುತ್ತಿರುವ ಶಕ್ತಿಗಳ ಹಿಂದೆ ಇರುವ ಸಮಾಜ ವಿರೋಧಿ ಜಾಲವನ್ನು ಬೇರುಸಹಿತ ಕಿತ್ತೊಗೆಯಬೇಕಿದೆ,” ಎಂದರು.
S. N. Channabasappa ಇದೇ ಸಂದರ್ಭದಲ್ಲಿ ಹಿಂದೂ ಸಮಾಜದ ಮೇಲಾಗುತ್ತಿರುವ ದಾಳಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, “ಹಿಂದೂಗಳ ಮನೆಗಳು, ಹಬ್ಬಗಳು ಮತ್ತು ಸಾಂಸ್ಕೃತಿಕ ಮೆರವಣಿಗೆಗಳನ್ನೇ ಗುರಿಯಾಗಿಸಿಕೊಂಡು ನಿರಂತರವಾಗಿ ಕಲ್ಲು ತೂರಾಟಗಳು ನಡೆಯುತ್ತಿವೆ. ಹಿಂದುಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ಸಮಾಜದ ಶಾಂತಿಯನ್ನು ಕದಡುತ್ತಿವೆ. ಇಂತಹ ಕೃತ್ಯಗಳ ಹಿಂದೆ ಇರುವ ಕೈಗಳನ್ನು ಪತ್ತೆ ಹಚ್ಚಲು ಕೇವಲ ತನಿಖೆ ಸಾಲದು, ಇದಕ್ಕಾಗಿಯೇ ವಿಶೇಷ ಕಾರ್ಯಪಡೆ ರಚನೆಯಾಗಬೇಕು,” ಎಂದು ಪ್ರತಿಪಾದಿಸಿದರು.
