ಮಕ್ಕಳಲ್ಲಿ ಬಾಲ್ಯದಿಂದ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮನೋಭಾವನೆ ಬೆಳೆಸುವಲ್ಲಿ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು.
ಗೋಪಾಳದ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಧಾರ್ಮಿಕ ಅರಿವು ಮೂಡಿಸುವುದಿಂದ ಮಕ್ಕಳು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.
ಸುಸಂಸ್ಕೃತ ಹಾಗೂ ಸದೃಢವಾದ ಸಮಾಜ ನಿರ್ಮಾಣ ಮಾಡುವಲ್ಲಿ ಮಕ್ಕಳ ಪಾತ್ರ ತುಂಬಾ ಪ್ರಮುಖ. ಬಾಲ್ಯದಿಂದಲೇ ಮಕ್ಕಳಿಗೆ ಈ ರೀತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿ ಒಳ್ಳೆಯ ವ್ಯಕ್ತಿತ್ವ ಹಾಗೂ ಆಲೋಚನೆ ನಿರ್ಮಾಣವಾಗುತ್ತದೆ. ನಮ್ಮ ದೇವಸ್ಥಾನ ಸಮಿತಿಯಿಂದ ಎಲ್ಲಾ ಹಬ್ಬ ಹಾಗೂ ಆಯಾ ಸಮಯಕ್ಕೆ ಸರಿಯಾಗಿ ಬರುವ ಕಾರ್ಯಕ್ರಮಗಳು ಆಯೋಜಿಸುವುದರ ಮುಖಾಂತರ ದೇವಸ್ಥಾನ ಒಂದು ಧಾರ್ಮಿಕ ಕ್ಷೇತ್ರವಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಾಗಸುಬ್ರಹ್ಮಣ್ಯ ದೇವಸ್ಥಾನ ನಗರದಲ್ಲಿ ಒಂದು ಮಾದರಿಯಾಗಿದೆ. ಸುಸಂಸ್ಕೃತವಾದ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆಗೆ ಅನಾವರಣಕ್ಕೆ ಪೂರಕವಾಗಿದೆ. ಆದ್ದರಿಂದ ಪೋಷಕರು ಇಂತಹ ಕಾರ್ಯಕ್ರಮಗಳಿಗೆ ಮಕ್ಕಳನ್ನು ಪ್ರೇರೇಪಿಸಿ ತೊಡಗಿಸಿಕೊಳ್ಳಬೇಕು. ಮಕ್ಕಳು ದೇವಸ್ಥಾನಗಳಿಗೆ ಬರುವುದೇ ಒಂದು ಪವಿತ್ರವಾದ ಕೆಲಸವಾಗಿದೆ ಎಂದು ಹೇಳಿದರು.
ಪ್ರಧಾನ ಅರ್ಚಕ ಸಂದೇಶ ಉಪಾಧ್ಯ ಮಾತನಾಡಿ, ವಾರದಲ್ಲಿ ಎರಡು ದಿನ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ರೀತಿಯ ಕಾರ್ಯಕ್ರಮದಿಂದ ರಾಮಾಯಣ ಹಾಗೂ ಮಹಾಭಾರತದ ಬಗ್ಗೆ ಅರಿವು ಮೂಡುತ್ತದೆ. ರಾಮೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಪ್ರತಿಭೆ ಅನಾವರಣಗೊಳಿಸಿದರು.
ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ, ಅರ್ಚಕ ವೃಂದದ ಸಹಯೋಗದೊಂದಿಗೆ ರಾಮ ನವಮಿ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ಹಾಡು, ರಾಮಾಯಣದ ಪಾತ್ರದ ವೇಷ ಭೂಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ಶಾಲಿನಿ, ಸುಜಾತಾ, ರಾಧಾ, ನಾಡಿಗ್, ವಿಜಯ್ ಕುಮಾರ್, ರಮಾಮಣಿ ಇತರರಿದ್ದರು.
