Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದುವುದು ಮುಖ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ ಆಯುಕ್ತ ಕೆ.ರವಿ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಜಿಲ್ಲಾ ಸಂಸ್ಥೆ, ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಐದು ದಿನದ ಕೃಷಿ ಮತ್ತು ತೋಟಗಾರಿಕಾ ತರಬೇತಿ ಶಿಬಿರ ಶಿಬಿರದಲ್ಲಿ ಕೃಷಿ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಕೃಷಿ ಬಗ್ಗೆ ಮಾಹಿತಿಯು ಅತ್ಯಗತ್ಯ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಪ್ರತಿ ಕ್ಷೇತ್ರದ ಅನುಭವಗಳು ಅತ್ಯಗತ್ಯ. ಕೃಷಿ ಕ್ಷೇತ್ರವು ಸಹ ಜ್ಞಾನಮಟ್ಟವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ತರಬೇತಿ ಆಯುಕ್ತ ಶಿವಶಂಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕೃಷಿ ಜ್ಞಾನದ ಕೊರತೆ ಇದೆ. ನಮ್ಮ ದೇಶದ ಬೆನ್ನೆಲುಬು ಕೃಷಿ. ಇದರ ಬಗ್ಗೆ ಸಮಗ್ರವಾದ ಮಾಹಿತಿ ನಾವು ತಿಳಿದುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಹ ತಮ್ಮ ಪಠ್ಯದ ಚಟುವಟಿಕೆಗಳ ಜೊತೆಗೆ ಕೃಷಿ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಕೃಷಿ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಇರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ. ಕೃಷಿಯ ಬಗ್ಗೆ ಅಗಾಧವಾದ ಮಾಹಿತಿ ಹಾಗೂ ಪ್ರಾತ್ಯಕ್ಷತೆ ದೊರೆಯುವುದರ ಮುಖಾಂತರ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ವಿಶೇಷ ಸಂಸ್ಥೆಯಾಗಿದೆ ಎಂದು ತಿಳಿಸಿದರು.
Bharat Scouts and Guides ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ರೋವರ್ಸ್ ರೆಂಜರ್ಸ್ ಮಕ್ಕಳಿಗೆ ಇರುವಕ್ಕಿ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಮಣ್ಣಿನ ಆರೋಗ್ಯ, ರಕ್ಷಣೆ, ಜೇನು ಸಾಕಾಣಿಕೆ, ವಿವಿಧ ಕೃಷಿ ಮಾಹಿತಿ ಮತ್ತು ತಳಿಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕುಲಸಚಿವ ಡಾ. ಕೆ.ಸಿ.ಶಶಿಧರ್ ಅವರು ಮಕ್ಕಳಿಗೆ ಕೃಷಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು, ಹಾವೇರಿ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ, ಬಾಗಲಕೋಟೆಯ ಸ್ಕೌಟ್ಸ್ ಅಂಡ್ ಗೈಡ್ಸ್ನ ರೋವರ್ಸ್, ರೆಂಜರ್ಸ್ ಗಳು ಪಾಲ್ಗೊಂಡಿದ್ದರು. ಗೈಡ್ ಮಾಸ್ಟರ್ ಸ್ವಾತಿ, ರುದ್ರಪ್ಪ ಚೀಲೂರ್ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
