B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದಾಗಿ ರೈತರ ಬೆಳೆ ಹಾನಿ, ಮನೆಗಳ ಮೇಲ್ಛಾವಣಿ ಕುಸಿತ ಹಾಗೂ ವಿದ್ಯುತ್ ವ್ಯತ್ಯಯದಂತಹ ಗಂಭೀರ ಸಮಸ್ಯೆಗಳು ಎದುರಾಗಿವೆ. ಈ ಕುರಿತು ಬಿ.ವೈ.ರಾಘವೇಂದ್ರ ಅವರು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ತ್ವರಿತ ಸಮೀಕ್ಷೆ ಮತ್ತು ಪರಿಹಾರ: ಮಳೆಯಿಂದ ಮನೆ ಕಳೆದುಕೊಂಡವರಿಗೆ ಹಾಗೂ ಅಡಿಕೆ ಸೇರಿದಂತೆ ವಿವಿಧ ಬೆಳೆ ಹಾನಿಗೊಳಗಾದ ರೈತರಿಗೆ ಜಿಲ್ಲಾಡಳಿತವು ತಕ್ಷಣವೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ವಿತರಿಸಬೇಕು. ವಿದ್ಯುತ್ ಸಂಪರ್ಕ ಪುನರ್ ಸ್ಥಾಪನೆ: ಜಿಲ್ಲೆಯ ಅನೇಕ ಕಡೆ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೆಸ್ಕಾಂ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಿ, ತುಂಡಾದ ತಂತಿಗಳನ್ನು ಸರಿಪಡಿಸಿ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.
ಸಾರ್ವಜನಿಕ ಸುರಕ್ಷತೆ: ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಹಾಗೂ ತುಂಡಾಗಿ ಬಿದ್ದಿರುವ ತಂತಿಗಳಿಂದ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
B.Y. Raghavendra ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದರು.
