Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾದರೆ ಡಿಜಿಟಲ್ ಮಾರ್ಕೆಟಿಂಗ್ ಎನ್ನುವುದು ಅತ್ಯಂತ ಅವಶ್ಯಕ ಎಂದು ಉದ್ಯಮಿ ಜಿ.ಸುನೀಲ್ಕುಮಾರ್ ಅಭಿಪ್ರಾಯಪಟ್ಟರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಮಾಧ್ಯಮಗಳ ಮೂಲಕ ಮಾರ್ಕೆಟಿಂಗ್ ತಂತ್ರಗಳನ್ನು ಅನುಸರಿಸಬೇಕು. ಜನಸಾಮಾನ್ಯರಿಗೆ ತಲುಪುವ ರೀತಿ ಮುನ್ನಡೆಯಬೇಕು ಎಂದು ತಿಳಿಸಿದರು.
ಯುವಪೀಳಿಗೆಯು ಫೇಸಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸುತ್ತಿರುವುದರಿಂದ ಪ್ರತಿಯೊಬ್ಬರಿಗೂ ವ್ಯಾಪಾರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸಲು ಸಾಧ್ಯವಾಗುತ್ತದೆ. ಉದ್ಯಮ ವಹಿವಾಟಿಗೆ ಹೆಚ್ಚಿನ ಅನುಕೂಲಗಳನ್ನು ಒದಗಿಸುತ್ತದೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ಕುಮಾರ್ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಬಳಸುವುದರಿಂದ ವೃತ್ತಿ ಕ್ಷೇತ್ರದ ಬಗ್ಗೆ ಹಲವಾರು ರೀತಿ ಪ್ರಚಾರ ಕಾರ್ಯಗಳನ್ನು ನಡೆಸಬಹುದಾಗಿದೆ. ವ್ಯವಹಾರ ದ್ವಿಗುಣಗೊಳ್ಳಲು ಸಹ ಡಿಜಿಟಲ್ ಮಾರ್ಕೆಟಿಂಗ್ ನೆರವಾಗುತ್ತದೆ. ಇಂದಿನ ಪರಿಸ್ಥಿತಿಗೆ ತಕ್ಕತೆ ವೃತ್ತಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದಿಂದ ಸಮಾಜಮುಖಿ ಕಾರ್ಯಗಳನ್ನು ಆಯೋಜಿಸುವ ಜತೆಯಲ್ಲಿ ಅರಿವು ಮೂಡಿಸುವ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ ರಾಂಪುರ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ತಂತ್ರಜ್ಞಾನದ ಮಾಹಿತಿಗಳನ್ನು ಅರಿತುಕೊಳ್ಳಬೇಕು. ಹೊಸ ಮಾದರಿ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ವ್ಯಾಪಾರ ವಹಿವಾಟಿಗೆ ಸಹಕಾರಿಯಾಗುತ್ತದೆ ಎಂದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಶ್ರೀಕಾಂತ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಪರಮೇಶ್ವರ್ ಶಿಗ್ಗಾವ್, ಎಸ್.ಗಣೇಶ್, ಬಿ.ಗಂಗಪ್ಪ, ಅರುಣ್ ದೀಕ್ಷಿತ್, ಎಸ್.ಎನ್.ಸಂಜೀವ್, ಪಿ.ನಾಗರಾಜ್, ರವಿಪ್ರಕಾಶ್ ಕಾಳಾಚಾರ್, ಸತೀಶ್ ಚಂದ್ರ, ವೀಣಾ ಕಿಶೋರ್, ಕೀರ್ತನಾ ಇತರರಿದ್ದರು.
