ಡೆಂಗ್ಯೂ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸೊಳ್ಳೆಗಳ ನಿಯಂತ್ರಣದ ಬಗ್ಗೆ ತಿಳವಳಿಕೆ ನೀಡುವುದು ಪ್ರಮುಖ ಆಶಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ವತಿಯಿಂದ ರೋಟರಿ ಶಿವಮೊಗ್ಗ ಪೂರ್ವ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ಜಾಗೃತಿ ದಿನಾಚರಣೆಯಲ್ಲಿ ಮಾತನಾಡಿ, ಡೆಂಗ್ಯೂ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಘೋಷವಾಕ್ಯದೊಂದಿಗೆ ಜಾಗೃತಿ ಮೂಡಿಸುತ್ತಿದ್ದು, ಎಲ್ಲರೂ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗ ನಗರ ಸ್ವಚ್ಛಗೊಳಿಸುವ ಕಾರ್ಮಿಕರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ತಾವು ಕೂಡ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಇಂತಹ ಮಾರಕ ರೋಗವನ್ನು ತಡೆಗಟ್ಟಬಹುದು.
ಸಮುದಾಯದಲ್ಲಿ ಎಲ್ಲರೂ ತಮ್ಮ ಮನೆ ಸುತ್ತಮುತ್ತ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮತ್ತು ಹೊರಭಾಗದಲ್ಲಿ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗಮನ ಹರಿಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಜಿ.ಬಿ.ಚಂದ್ರಶೇಖರ ಮಾತನಾಡಿ, ಸಮಾಜಮುಖಿ ಸೇವಾ ಸಂಸ್ಥೆಗಳು, ಪಾಲಿಕೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರು ಸೇರಿ ಎಲ್ಲರೂ ಕೈಜೋಡಿಸಿದಾಗ ಇಂತಹ ರೋಗವನ್ನು ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂತಹ ಕಾರ್ಯಕ್ರಗಳಲ್ಲಿ ಸದಾ ಕೈಜೋಡಿಸುತ್ತದೆ. ಡೆಂಗ್ಯೂ ತಡೆಗಟ್ಟುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್.ಧೀರೇಂದ್ರ, ಪ್ರಭಾರ ಆರೋಗ್ಯ ಮೇಲ್ವಿಚಾರಣಾಧಿಕಾರಿ ಬಿ.ಕೆ.ರಾಜು, ಟಿ.ಎಂ.ಶಶಿಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಇಲಾಖೆ ಸಿಬ್ಬಂದಿ ಇತರರು ಇದ್ದರು.
