ಶಿವಮೊಗ್ಗ ತಾಲ್ಲೂಕಿನ ನಿದಿಗೆ ಒಂದನೇ ಹೋಬಳಿ ವ್ಯಾಪ್ತಿಯ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಬಲವರ್ಧನೆಗೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.
ಈ ಸಂಬಂಧ ಬೆಂಗಳೂರಿನ ವಿಧಾನಸೌಧದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹಾಗೂ ಮಹಾನಗರ ಪಾಲಿಕೆಯ ಆಡಳಿತ ಅಧಿಕಾರಿಗಳಾದ ಶ್ರೀ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಶಾಸಕರು ಖುದ್ದು ಭೇಟಿಯಾಗಿ ಜಮೀನು ಮಂಜೂರಾತಿ ಕುರಿತು ಸಮಾಲೋಚನೆ ನಡೆಸಿದರು.
ಶಿವಮೊಗ್ಗ ತಾಲ್ಲೂಕಿನ ಇಸ್ಲಾಪುರ ಗ್ರಾಮದ ಸರ್ವೆ ನಂಬರ್ 29ರಲ್ಲಿ ಲಭ್ಯವಿರುವ 2 ಎಕರೆ 30 ಗುಂಟೆ ಜಮೀನನ್ನು “ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಶ್ರೀ ಗುಡ್ಡೆಕಲ್ಲು ಗವಿಸಿದ್ದೇಶ್ವರ, ಉಚ್ಚಂಗಮ್ಮ ಮತ್ತು ದುರ್ಗಮ್ಮ ಸೇವಾ ಸಮಿತಿ” ಇವರ ಧಾರ್ಮಿಕ ಮತ್ತು ಸಾರ್ವಜನಿಕ ಸೇವಾ ಕಾರ್ಯಗಳ ಉದ್ದೇಶಕ್ಕಾಗಿ ನಿಯಮಾನುಸಾರ ಮಂಜೂರು ಮಾಡಿಕೊಡಬೇಕು ಎಂದು ಶಾಸಕರು ಆಯುಕ್ತರಿಗೆ ಪುನಃ ಪ್ರಸ್ತಾವನೆಯನ್ನು ಸಲ್ಲಿಸಿ ಚರ್ಚಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು, “ಸದರಿ ಸೇವಾ ಸಮಿತಿಯು ಭಾಗದ ಜನರ ಶ್ರದ್ಧೆಯ ಕೇಂದ್ರವಾಗಿದ್ದು, ಸಾಮಾಜಿಕ ಕಲ್ಯಾಣ ಕಾರ್ಯಗಳಲ್ಲೂ ತೊಡಗಿಸಿಕೊಂಡಿದೆ. ಸಮಿತಿಯ ಸುಸೂತ್ರ ನಿರ್ವಹಣೆಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಈ ಭೂಮಿಯ ಅವಶ್ಯಕತೆ ಇದ್ದು, ಕಂದಾಯ ಇಲಾಖೆಯ ನಿಯಮಗಳ ಅಡಿಯಲ್ಲಿ ಶೀಘ್ರವಾಗಿ ಜಮೀನು ಹಸ್ತಾಂತರ ಪ್ರಕ್ರಿಯೆ ಮುಗಿಸಿಕೊಡಲು ಪ್ರಾದೇಶಿಕ ಆಯುಕ್ತರಲ್ಲಿ ವಿನಂತಿಸಲಾಗಿದೆ” ಎಂದು ತಿಳಿಸಿದರು. ಶಾಸಕರ ಈ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಆಯುಕ್ತರು, ಕಡತವನ್ನು ಶೀಘ್ರವಾಗಿ ಪರಿಶೀಲಿಸಿ ಮುಂದಿನ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
