ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಇಂದಿನಿಂದ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ
ಕೆಲ ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಆನೆಗಳನ್ನು ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಬಂದಂತಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದುಬಾರೆಯಲ್ಲಿ ನಡೆದ ಘಟನೆ ಸಕ್ರೆಬೈಲು ಆನೆ ಬಿಡಾರದಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಅರಣ್ಯ ಇಲಾಖೆ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಂದಿನಿಂದ ಕೆಲ ದಿನಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ.
ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು ಐದು ಹೆಣ್ಣು ಆನೆಗಳು ಇವೆ.
