ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಇಂದು ಭಾರೀ ಅವ್ಯವಸ್ಥೆ ಕಂಡುಬಂದಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಬೆಳಗ್ಗೆಯಿಂದಲೇ ರೋಗಿಗಳು ಸಂಕಷ್ಟ ಅನುಭವಿಸಿದರು. ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದ್ದರೂ ಅದನ್ನು ಬಳಸದೇ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದಿದೆ.
ತೀರ್ಥಹಳ್ಳಿ ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಇಲಾಖೆ ಕಡಿತಗೊಳಿಸಿತು. ಇದರ ಪರಿಣಾಮವಾಗಿ ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯೂ ಕತ್ತಲಿನಲ್ಲಿ ಮುಳುಗಿತು.
ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಇಲ್ಲದೇ ಆಸ್ಪತ್ರೆಯ ರೋಗಿಗಳು ಮತ್ತು ಸಿಬ್ಬಂದಿ ಪರದಾಡುವಂತಾಯಿತು. ವಿಶೇಷವಾಗಿ ವಾರ್ಡ್ಗಳಲ್ಲಿ ಫ್ಯಾನ್ ಹಾಗೂ ದೀಪಗಳಿಲ್ಲದೆ ರೋಗಿಗಳು ತೀವ್ರ ತೊಂದರೆ ಅನುಭವಿಸಿದರು.
ಇದೇ ವೇಳೆ ಆಸ್ಪತ್ರೆಯಲ್ಲಿ ಇಂದು ಎಂಟು ಶಸ್ತ್ರಚಿಕಿತ್ಸೆಗಳು ನಡೆದಿದ್ದು, ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಕರು ಆತಂಕಕ್ಕೀಡಾದರು. ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದ್ದರೂ ಅದನ್ನು ಕಾರ್ಯಗತಗೊಳಿಸದೇ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಘಟನೆಗೆ ರೋಗಿಗಳು ಹಾಗೂ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದರು.
